ಬೆಂಗಳೂರು: ಬಂಜಾರ ಸಾಹಿತ್ಯ, ಭಾಷೆ ಮತ್ತು ಸಾಂಸ್ಕೃತಿಕ ಅಕಾಡೆಮಿ ಸ್ಥಾಪನೆ ಸೇರಿದಂತೆ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ರಾಜ್ಯಮಟ್ಟದ ಪ್ರಥಮ ಬಂಜಾರ ಸಾಹಿತ್ಯ-ಸಾಂಸ್ಕೃತಿಕ ಸಮಾವೇಶದಲ್ಲಿ ಒತ್ತಾಯಿಸಲಾಯಿತು.
ಬಂಜಾರ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಕಾಡೆಮಿಯ ಆಶ್ರಯದಲ್ಲಿ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ನಡೆದ ಸಮಾವೇಶದಲ್ಲಿ ಸಮುದಾಯದ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡಿಸಲಾಯಿತು.
`ಬಂಜಾರ ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಬೇಕು. ಜಾನಪದ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಬಂಜಾರ ಅಧ್ಯಯನ ಪೀಠ ಸ್ಥಾಪನೆ ಮಾಡಬೇಕು.
ಬಂಜಾರ ಮಕ್ಕಳ ಮಾರಾಟ ತಡೆಗಾಗಿ ವಿಶೇಷ ಪ್ಯಾಕೇಜ್ ಪ್ರಕಟ ಹಾಗೂ ಈ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಆರ್ಥಿಕವಾಗಿ ಹಿಂದುಳಿದ ಬಂಜಾರರಿಗೆ ಮೀಸಲಾತಿ ಸೌಲಭ್ಯ ನೀಡಬೇಕು~ ಎಂದು ಒತ್ತಾಯಿಸಲಾಯಿತು. ರಾಜ್ಯ ಲಲಿತಕಲಾ ಅಕಾಡೆಮಿಯ ಅಧ್ಯಕ್ಷ ಚಿ.ಸು.ಕೃಷ್ಣ ಶೆಟ್ಟಿ ಚಿತ್ರಕಲಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, `ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಬಂಜಾರ ಸಮುದಾಯದ ಜನರು ಸಾಂಸ್ಕೃತಿಕವಾಗಿ ಶ್ರೀಮಂತರು. ಅವರ ವೇಷಭೂಷಣ ಸಮೃದ್ಧವಾದುದು~ ಎಂದರು.
`ರಾಜ್ಯದಲ್ಲಿ ಬಂಜಾರ ಸಮುದಾಯದ 50 ಚಿತ್ರಕಲಾವಿದರು ಇದ್ದಾರೆ. ಸಾಹಿತ್ಯ, ನಾಟಕ ಸೇರಿದಂತೆ ಸಾಂಸ್ಕೃತಿಕ ರಂಗದಲ್ಲಿ ಸಮುದಾಯದ ಜನತೆ ಕ್ರಿಯಾಶೀಲರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬಂಜಾರ ಸಮುದಾಯ ರಾಜಕೀಯವಾಗಿ ಪ್ರಬಲವಾಗಿದೆ~ ಎಂದರು.
ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್, ಬಂಜಾರ ಸಮುದಾಯದ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಮಾಜಿ ಸಚಿವೆ ಬಿ.ಟಿ.ಲಲಿತಾನಾಯಕ್, ಕನ್ನಡ ಸಾಹಿತ್ಯ ಪರಿಷತ್ ನಗರ ಘಟಕದ ಅಧ್ಯಕ್ಷ ಟಿ.ತಿಮ್ಮೇಶ್, ರಂಗತಜ್ಞ ಡಾ.ಎ.ಆರ್.ಗೋವಿಂದಸ್ವಾಮಿ ಮತ್ತಿತರರು ಇದ್ದರು.