ಬೆಂಗಳೂರು: ಇಪ್ಪತ್ತು ಖಾತೆಗಳ ಉಸ್ತುವಾರಿಯ ಭಾರದಿಂದ ಆಡಳಿತ ನಿರ್ವಹಣೆಗೆ ತೊಡಕಾಗುತ್ತಿರುವ ಹಿನ್ನೆಲೆಯಲ್ಲಿ ವಿಧಾನಮಂಡಲದ ಬಜೆಟ್ ಅಧಿವೇಶನಕ್ಕೂ ಮುನ್ನವೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹೇಳಿದರು.
ಗೃಹ ಕಚೇರಿ `ಕೃಷ್ಣಾ~ದಲ್ಲಿ ಗುರುವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, `ಹಲವು ಖಾತೆಗಳನ್ನು ಹೊಂದಿರುವುದರಿಂದ ಆಗುತ್ತಿರುವ ಸಮಸ್ಯೆಗಳ ಕುರಿತು ಪಕ್ಷದ ವರಿಷ್ಠರು, ರಾಜ್ಯ ಘಟಕದ ಅಧ್ಯಕ್ಷರು ಮತ್ತು ಮಾಜಿ ಮುಖ್ಯಮಂತ್ರಿಯವರ ಜೊತೆ ಎರಡು-ಮೂರು ದಿನಗಳೊಳಗೆ ಚರ್ಚೆ ನಡೆಸುತ್ತೇನೆ. ಎಲ್ಲರ ಮನವೊಲಿಸಿ ಬಜೆಟ್ಗೂ ಮುನ್ನವೇ ಸಂಪುಟ ವಿಸ್ತರಿಸಲು ನಿರ್ಧರಿಸಿದ್ದೇನೆ~ ಎಂದರು.
`ಮುಖ್ಯಮಂತ್ರಿ ಬಳಿ ಹಲವು ಖಾತೆಗಳಿವೆ ಎಂದು ಜನರು ಹೆಚ್ಚು ದಿನ ಮಾತನಾಡಲು ಅವಕಾಶ ನೀಡುವುದಿಲ್ಲ. ಹೊಸಬರಿಗೂ ಸಚಿವರಾಗಿ ಕೆಲಸ ಮಾಡಲು ಅವಕಾಶ ನೀಡಬೇಕಿದೆ. ಈ ಎಲ್ಲ ವಿಷಯಗಳ ಬಗ್ಗೆ ಪಕ್ಷದ ವರಿಷ್ಠರ ಜೊತೆ ಮಾತುಕತೆ ನಡೆಸಿದ ಬಳಿಕವೇ ಅಂತಿಮ ತೀರ್ಮಾನಕ್ಕೆ ಬರಲಾಗುವುದು~ ಎಂದು ಹೇಳಿದರು.
ಸಭೆ ಇಲ್ಲ: ಲೋಕಾಯುಕ್ತರ ನೇಮಕ ಪ್ರಕ್ರಿಯೆ ಕುರಿತು ಸಲಹೆ ನೀಡುವಂತೆ ಶೀಘ್ರದಲ್ಲೇ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ, ವಿಧಾನಸಭೆ ಸ್ಪೀಕರ್, ವಿಧಾನ ಪರಿಷತ್ ಸಭಾಪತಿ ಮತ್ತು ವಿಧಾನಮಂಡಲದ ಉಭಯ ಸದನಗಳ ವಿರೋಧ ಪಕ್ಷಗಳ ನಾಯಕರಿಗೆ ಪತ್ರ ಬರೆಯಲಾಗುವುದು.
ಈ ಮುನ್ನವೇ ಪತ್ರ ಬರೆಯಲು ತೀರ್ಮಾನಿಸಲಾಗಿತ್ತು. ಉನ್ನತ ಶಿಕ್ಷಣ ಸಚಿವ ಡಾ.ವಿ.ಎಸ್.ಆಚಾರ್ಯ ಅವರ ನಿಧನದಿಂದಾಗಿ ಪತ್ರ ಬರೆಯುವುದು ವಿಳಂಬವಾಗಿದೆ ಎಂದು ಸದಾನಂದ ಗೌಡ ಹೇಳಿದರು.
`ಹಿಂದಿನ ಸರ್ಕಾರಗಳು ಅನುಸರಿಸಿದ ಪರಂಪರೆಯಂತೆಯೇ ಲೋಕಾಯುಕ್ತರ ನೇಮಕ ನಡೆಯಲಿದೆ. ಸಭೆ ನಡೆಸಿ ಸಮಾಲೋಚಿಸುವ ಕ್ರಮವನ್ನು ಹೊಸದಾಗಿ ಅನುಸರಿಸುವುದಿಲ್ಲ~ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
`ಕಣ್ಣಿಗೆ ಬಟ್ಟೆ ಕಟ್ಟಿ ಆನೆ ಹುಡುಕದಿರಿ~
`ಬ್ಲೂ ಫಿಲಂ~ ವೀಕ್ಷಣೆ ವಿವಾದದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಮೂವರು ಮಾಜಿ ಸಚಿವರ ವಿರುದ್ಧ ವಿಧಾನಸಭೆಯ ಸ್ಪೀಕರ್ ರಚಿಸುವ ವಿಚಾರಣಾ ಸಮಿತಿಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂಬ ವಿರೋಧ ಪಕ್ಷಗಳ ವಾದ ಸಮರ್ಥನೀಯವಲ್ಲ.
ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಆನೆಯನ್ನು ಹುಡುಕುವ ಕೆಲಸವನ್ನು ಮಾಡಬಾರದು ಎಂದು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು. ಅರಣ್ಯ ಸಚಿವ ಸಿ.ಪಿ.ಯೋಗೇಶ್ವರ್ ಮತ್ತು ಶಾಸಕ ಡಿ.ಕೆ.ಶಿವಕುಮಾರ್ ನಡುವಿನ ಸಂಘರ್ಷ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು, `ಶಿವಕುಮಾರ್ ಅವರು ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಸಚಿವ ಯೋಗೇಶ್ವರ್ ಅವರೊಂದಿಗೆ ಚರ್ಚೆ ನಡೆಸುತ್ತೇನೆ. ಬಳಿಕ ಈ ಬಗ್ಗೆ ತನಿಖೆ ನಡೆಸಿ ಸತ್ಯಾಂಶ ಕಂಡುಬಂದರೆ ಸೂಕ್ತ ಕ್ರಮ ಜರುಗಿಸುತ್ತೇವೆ~ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.