ರಾಜ್ಯ ಸರ್ಕಾರ ಈ ವರ್ಷದ ಬಜೆಟ್ನಲ್ಲಿ ರಾಜ್ಯ ಎಲ್ಲಾ ಜಿಲ್ಲೆಗಳಿಗೆ ಹಣಕಾಸಿನ ಹಂಚಿಕೆಯಲ್ಲಿ ಸಮಾನತೆ ತೋರಬೇಕು. ಇದುವರೆಗೆ ಸರ್ಕಾರ ನಗರ ಪ್ರದೇಶಗಳಿಗೆ ಹೆಚ್ಚಿನ ಆದ್ಯತೆ ನೀಡುವ ಪರಿಪಾಠ ಬೆಳೆಸಿಕೊಂಡಿದೆ.
ರೈತರು, ವಿದ್ಯಾರ್ಥಿಗಳು, ಮಹಿಳೆಯರು, ವೃದ್ಧರು, ಅಂಗವಿಕಲರು ಮತ್ತು ನಿರುದ್ಯೋಗಿಗಳಿಗೆ ನೆರವಾಗುವಂತಹ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ರೂಪಿಸಿ ಅದಕ್ಕೆ ಹಣ ಒದಗಿಸಬೇಕು.
ಹೈದರಾಬಾದ್ ಕರ್ನಾಟಕ ಪ್ರದೇಶ ವ್ಯಾಪ್ತಿಯ ಬೀದರ್, ಗುಲ್ಬರ್ಗ, ರಾಯಚೂರು, ಯಾದಗಿರಿ, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ನಿರುದ್ಯೋಗಿ ಅನಕ್ಷರಸ್ಥರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇವರಲ್ಲಿ ಅನೇಕರು ಪ್ರತಿ ವರ್ಷ ನೆರೆಯ ರಾಜ್ಯಗಳಿಗೆ ಕೆಲಸ ಹುಡುಕಿಕೊಂಡು ಗುಳೇ ಹೋಗುತ್ತಾರೆ.
ನಮ್ಮ ಜನರು ನೆರೆ ರಾಜ್ಯಗಳಲ್ಲಿ ಮೂರನೇ ದರ್ಜೆಯ ಪ್ರಜೆಗಳಂತೆ ಜೀವಿಸುವುದು ರಾಜ್ಯಕ್ಕೆ ಗೌರವ ತರುವ ವಿಷಯ ಅಲ್ಲ. ಅಂಥವರಿಗಾಗಿ ಸ್ಥಳೀಯವಾಗಿ ಕೈಗಾರಿಕೆಗಳನ್ನು ಆರಂಭಿಸುವ ಬಗ್ಗೆ ಸರ್ಕಾರ ಬಜೆಟ್ನಲ್ಲಿ ಹಣ ಒದಗಿಸಬೇಕು.