ಕೋಲಾರ: ಪ್ರಸಕ್ತ ಸಾಲಿನ ಆಯ-ವ್ಯಯ ಮಂಡನೆಯಲ್ಲಿ ಜಿಲ್ಲೆಗೆ ಯುಗಾದಿ ಬಂಪರ್ ಕೊಡುಗೆ ನೀಡಲು ಮುಖ್ಯಮಂತ್ರಿ ಸಿದ್ಧತೆ ನಡೆಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವರ್ತೂರು ಪ್ರಕಾಶ್ ತಿಳಿಸಿದರು.
ನಗರದ ಎಸ್ಪಿ ಮನೆಯಿಂದ ಗಾಂಧಿನಗರದ ಮೇಲ್ಸೆತುವೆವರೆಗೂ 64 ಲಕ್ಷ ರೂಪಾಯಿ ವೆಚ್ಚದಲ್ಲಿ ನಡೆಯುವ ರಸ್ತೆ ಡಾಂಬರೀಕರಣ ಕಾಮಗಾರಿಗೆ ಈಚೆಗೆ ಚಾಲನೆ ನೀಡಿ ಮಾತನಾಡಿದರು.
ಮುಖ್ಯಮಂತ್ರಿ ಈಚೆಗೆ ನಡೆಸಿದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಜಿಲ್ಲೆಗೆ ಅಗತ್ಯವಿರುವ ಮಹತ್ವಾಕಾಂಕ್ಷಿ ಯೋಜನೆ ಜಾರಿಗೊಳಿಸಲು ಮನವಿ ಮಾಡಿರುವೆ. ಅದಕ್ಕೆ ಅಗತ್ಯವಾದ ರೂಪುರೇಷೆ ತಯಾರಿಸಲಾಗಿದೆ. ಜಿಲ್ಲೆ ಜನತೆಗೆ ಈ ಬಾರಿಯ ಯುಗಾದಿ ಸಂಭ್ರಮ ತರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೋಲಾರದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಗರದಾದ್ಯಂತ 60 ಕೋಟಿ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿ ನಡೆಯುತ್ತಿವೆ. ಮೆಕ್ಕೆ ವೃತ್ತದಿಂದ ಬಂಗಾರಪೇಟೆ ವೃತ್ತದವರೆಗಿನ 1 ಕೋಟಿ ವೆಚ್ಚದ ಡಾಂಬರು ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ಡೂಂಲೈಟ್ ವೃತ್ತದಿಂದ ಕ್ಲಾಕ್ ಟವರ್ವರೆಗಿನ ರಸ್ತೆ ಕಾಮಗಾರಿ ನಡೆಯುತ್ತಿದೆ.
ಇದು ಮುಗಿದ ಕೂಡಲೇ ಸೋಡಿಯಂ ದೀಪಗಳ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಪ್ರಕಟಿಸಿದರು.
ಲೋಕೋಪಯೋಗಿ ಇಲಾಖೆ ಮೂಲಕ ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ. ಪಾದಚಾರಿ ರಸ್ತೆಗಳಲ್ಲಿ ಮಾದರಿ ಕಲ್ಲು ಅಳವಡಿಸುವ ಬಗ್ಗೆ ಮುಖ್ಯಮಂತ್ರಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ನಗರಸಭೆಗೆ ವಿಶೇಷ ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಪ್ರಧಾನ ಕಾರ್ಯದರ್ಶಿ ಜೊತೆ ಮಾತುಕತೆ ನಡೆಸಲಾಗಿದೆ. ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣ ಕಾಮಗಾರಿ ಇನ್ನು ಆರು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಅದಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಕಳುಹಿಸಲಾಗಿದೆ. 6 ಕೋಟಿ ವೆಚ್ಚದಲ್ಲಿ ಜಿಲ್ಲಾಧಿಕಾರಿ ಕಚೇರಿ ನವೀಕರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.
ನಗರಸಭೆ ಉಪಾಧ್ಯಕ್ಷ ಎಲ್. ಖಲೀಲ್, ಸದಸ್ಯರಾದ ನಜೀರ್ ಅಹಮದ್, ಕೆ.ಎನ್. ಮಧುಸೂಧನ್ಕುಮಾರ್, ವಿ.ಕೆ.ರಾಜೇಶ್, ರೌತ್ ಶಂಕರಪ್ಪ, ಶ್ರೀರಾಮಪ್ಪ, ಸೋಮಶೇಖರ್, ಬೆಗ್ಲಿ ಸೂರ್ಯಪ್ರಕಾಶ್, ಯುವ ಮುಖಂಡರಾದ ತ್ಯಾಗರಾಜ್ ಮುದ್ದಪ್ಪ, ಜನಾರ್ದನ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.