ದಾವಣಗೆರೆ: ಗ್ರಾಮದ ಕೆರೆಗಳೂ ಸೇರಿದಂತೆ ಜಲಮೂಲಗಳನ್ನು ಸಂರಕ್ಷಿಸಿದರೆ ಎಂತಹ ಬರದ ಸ್ಥಿತಿಯನ್ನೂ ನಿಭಾಯಿಸಬಹುದು. ರೈತರು ಆತ್ಮಹತ್ಯೆ ದಾರಿ ಹಿಡಿಯುವುದನ್ನು ತಪ್ಪಿಸಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ. ರವೀಂದ್ರನಾಥ್ ಅಭಿಪ್ರಾಯಪಟ್ಟರು.
ಜಲ ಸಂವರ್ಧನೆ ಯೋಜನಾ ಸಂಘ ಹಾಗೂ ಬೆಂಗಳೂರು ಕೃಷಿ ವಿವಿ ಆಶ್ರಯದಲ್ಲಿ ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ಯೋಜನಾ ಘಟಕಗಳು ಶನಿವಾರ ನಗರದಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಎಸ್.ಎಂ. ವೀರೇಶ್ ಹನಗವಾಡಿ ಮಾತನಾಡಿ, ಗ್ರಾಮ ಪಂಚಾಯ್ತಿ ಹಾಗೂ ಕೆರೆ ಬಳಕೆದಾರರ ಸಂಘದ ಸದಸ್ಯರು ಹೊಂದಾಣಿಕೆಯಿಂದ ಕಾರ್ಯನಿರ್ವಹಿಸಿದರೆ ಉತ್ತಮ ಪ್ರಗತಿ ಕಾಣಬಹುದು ಎಂದರು.
ಜಿಲ್ಲಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ, ಜಿಲ್ಲೆಯಲ್ಲಿ 90 ಕೆರೆಗಳನ್ನು ಯೋಜನೆಗೆ ಅಳವಡಿಸಿದ್ದು, ಇದುವರೆಗೆ ರೂ 11.5 ಕೋಟಿ ವ್ಯಯಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕೃಷಿ ವಿವಿ ಯೋಜನಾ ಸಂಯೋಜಕ ಡಾ.ಜಿ. ಈಶ್ವರಪ್ಪ ಪ್ರಾಸ್ತಾವಿಕ ಮಾತನಾಡಿದರು. ಜಿ.ಪಂ. ಸಿಇಒ ಗುತ್ತಿ ಜಂಬುನಾಥ್, ಕೃಷಿಕ ಸಮಾಜದ ಅಧ್ಯಕ್ಷ ಹನುಮಂತಪ್ಪ, ಎಚ್. ಶಿವಪ್ಪ, ಎ.ಆರ್. ರವಿ, ಜಿ. ಸಿದ್ದಪ್ಪ, ಡಾ.ಹುಲಗೂರ್ ಮತ್ತಿತರರು ಉಪಸ್ಥಿತರಿದ್ದರು.