ಮಡಿಕೇರಿ: ಜಿಲ್ಲೆಯ ಕುಶಾಲನಗರ, ಸಂಪಾಜೆ, ಅಮ್ಮತ್ತಿ ಮತ್ತು ಬಾಳಲೆ ಹೋಬಳಿಗಳನ್ನು ಬರಪೀಡಿತವೆಂದು ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರು, ಜಾನುವಾರು ಸಂರಕ್ಷಣೆ ಮತ್ತಿತರ ಕಾರ್ಯಗಳಿಗೆ 3ಕೋಟಿ ರೂಪಾಯಿ ಬಿಡುಗಡೆ ಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್.ವಿ.ಪ್ರಸಾದ್ ಹೇಳಿದರು.
ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರು ಬರ ಪರಿಸ್ಥಿತಿ ಅವಲೋಕನಕ್ಕೆ ಸಂಬಂಧಿಸಿದಂತೆ ವಿಡಿಯೊ ಸಂವಾದವು ಬೆಂಗಳೂರಿನಲ್ಲಿ ಅ.10ರಂದು ನಡೆಯಲಿದ್ದು, ಈ ವಿಡಿಯೊ ಸಂವಾದ ಪೂರ್ವ ತಯಾರಿಗೆ ಸಂಬಂಧಿಸಿದಂತೆ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಈ ಅನುದಾನವನ್ನು ಆಯಾ ವಿಧಾನಸಭಾ ಕ್ಷೇತ್ರಗಳ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ಪೋರ್ಸ್ ಸಭೆ ನಡೆಸಿ ಕೂಡಲೇ ಕ್ರೀಯಾಯೋಜನೆ ತಯಾರಿಸಿ ವರದಿ ನೀಡುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿ ಗಳಿಗೆ ಅವರು ನಿರ್ದೇಶನ ನೀಡಿದರು.
ಬರಪೀಡಿತ ಪ್ರದೇಶಗಳಲ್ಲಿ ಬೆಳೆ, ಬರನಿರ್ವಹಣೆ, ಮೇವು ಸಂಗ್ರಹ ಮತ್ತು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ಕಲ್ಪಿಸುವುದು ಮತ್ತಿತರ ಬಗ್ಗೆ ಮಾಹಿತಿ ನೀಡುವಂತೆ ಅವರು ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಬಿ.ಅಂಜನಪ್ಪ ಮಾತನಾಡಿ, ಬರ ಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರು, ಬೆಳೆಹಾನಿ ಬಗ್ಗೆ ನಿಖರ ಹಾಗೂ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಕಲ್ಪಿಸುವ ಬಗ್ಗೆ ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ ಕಾರ್ಯಪಾಲಕ ಅಭಿಯಂತರ ಮಂಜುನಾಥ, ಸಹಾಯಕ ಕಾರ್ಯಪಾಲಕ ಅಭಿಯಂತರ ಮಹದೇವ ಸ್ವಾಮಿ, ತಹಶೀಲ್ದಾರ್ ನಾಗರಾಜು (ವಿರಾಜಪೇಟೆ), ವಾಸುದೇವಚಾರ (ಮಡಿಕೇರಿ), ಅಪರ ತಹಶೀಲ್ದಾರ್ ಜಯರಾಮ್ (ಸೋಮವಾರಪೇಟೆ), ಸೆಸ್ಕ್ ಕಾರ್ಯಪಾಲಕ ಅಭಿಯಂತರ ಸೋಮರಾಜು, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಪ್ರಮೋದ್, ಹಾರಂಗಿ ಜಲಾಶಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಪಾಲನೇತ್ರಯ್ಯ ಮತ್ತಿತರರು ಹಾಜರಿದ್ದರು.