ಇಂಡಿ: ಬರಗಾಲದ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ಪ್ರಭಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೆಂದು ನೇಮಕ ಮಾಡಲಾಗಿದೆ.
ಈ ಅಧಿಕಾರಿಗಳು ಸೂಚಿಸಿದ ಪಂಚಾಯಿತಿಗಳಿಗೆ ಹೋಗಿ ತಕ್ಷಣವೇ ಕರ್ತವ್ಯಕ್ಕೆ ಹಾಜರಾಗಬೇಕು. ಒಂದು ವಿಳಂಬ ಮಾಡಿದ್ದಾದರೆ ಅಂಥವರನ್ನು ಅಮಾನತುಗೊಳಿಸಲಾಗುವುದು ಎಂದು ವಿಜಾಪುರ ಜಿ.ಪಂ. ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎ.ಎನ್. ಪಾಟೀಲ ಕಟ್ಟುನಿಟ್ಟಿನ ಆದೇಶ ನೀಡಿದರು.
ಬರ ಕಾಮಗಾರಿ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಬಗ್ಗೆ ಚರ್ಚಿಸಲು ಬುಧವಾರ ಇಲ್ಲಿಯ ತಾ.ಪಂ. ಸಭಾಭವನದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ಕೇಂದ್ರ ಸರಕಾರ ನೀಡಿದ ಉದ್ಯೋಗ ಖಾತ್ರಿ ಯೋಜನೆಯ ಅನುದಾನ ಸದ್ಬಳಕೆ ಮಾಡಿಕೊಂಡು ಗ್ರಾಮಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು. ಬರಗಾಲ ಎದುರಿಸಲು ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ಜೊತೆ ಜೊತೆಯಾಗಿ ಗ್ರಾಮಗಳಲ್ಲಿಯ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲ್ಲೂಕಿನಲ್ಲಿಯ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳ ಮಾಹಿತಿ ಪಡೆದುಕೊಂಡು ಅಲ್ಲಿ ಕುಡಿಯುವ ನೀರು ಸರಬರಾಜು ಮಾಡಬೇಕು. ಕೊಳವೆ ಬಾವಿಗಳನ್ನು ದುರಸ್ತಿ ಮಾಡಬೇಕು, ಅಗತ್ಯವಿದ್ದಕಡೆ ಕೊಳವೆ ಬಾವಿಗಳನ್ನು ತೋಡಿಸಬೇಕು. ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಾಹಕ ಎಂಜಿನಿಯರ್ ಎಸ್.ಜಿ.ಕಗ್ಗೋಡ, ತಹಶೀಲ್ದಾರ ಜಿ.ಎಲ್.ಮೇತ್ರಿ ವೇದಿಕೆಯಲ್ಲಿದ್ದರು.