ಬಾಗಲಕೋಟೆ: `ಉತ್ತರ ಕರ್ನಾಟಕದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಬಸವೇಶ್ವರ ವಿದ್ಯಾವರ್ಧಕ ಸಂಘವು ಮುಧೋಳದಲ್ಲಿ ನೂತನವಾಗಿ ಪ್ರಾರಂಭಿಸಿರುವ ಬೀಳೂರು ಗುರುಬಸವ ಮಹಾಸ್ವಾಮೀಜಿ ಎಂಜಿನಿಯರಿಂಗ್ ಕಾಲೇಜಿನ ಉದ್ಘಾಟನೆ ಇದೇ 6 ರಂದು ಬೆಳಿಗ್ಗೆ 9.30ಕ್ಕೆ ನಡೆಯಲಿದೆ' ಎಂದು ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಹೇಳಿದರು.
`್ಙ20 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಸಕ್ತ ಸಾಲಿನಿಂದ ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗ ಆರಂಭಗೊಂಡಿದೆ' ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
`ಮುಧೋಳದಲ್ಲಿ ಎಂಜಿನಿಯರಿಂಗ್ ಕಾಲೇಜು ಆರಂಭದಿಂದ ಜಮಖಂಡಿ, ಮಹಾಲಿಂಗಪುರ, ರಬಕವಿ, ಹನಹಟ್ಟಿ, ತೇರದಾಳ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಿದೆ' ಎಂದರು.
ಉದ್ಘಾಟನೆ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ನೂತನ ಕಾಲೇಜು ಉದ್ಘಾಟಿಸಲಿದ್ದಾರೆ. ಇಳಕಲ್ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನಮಠದ ಡಾ.ಮಹಾಂತ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ.
ಸಚಿವರಾದ ಆರ್.ವಿ. ದೇಶಪಾಂಡೆ, ಎಸ್.ಆರ್. ಪಾಟೀಲ, ಉಮಾಶ್ರೀ, ಸಂಸದ ಗದ್ದಿಗೌಡರ, ಶಾಸಕ ಗೋವಿಂದ ಕಾರಜೋಳ, ವಿಧಾನ ಪರಿಷತ್ ಸದಸ್ಯ ಬಸವರಾಜ ಎಸ್.ಹೊರಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಬಿವಿವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ಪ್ರಾಂಶುಪಾಲರಾದ ಪ್ರೊ.ಆರ್.ಎನ್. ಹೆರಕಲ್, ಡಾ.ಎಸ್.ಟಿ. ದುಂಡೂರು, ಜಿ.ಎನ್. ಕರೂರ ಉಪಸ್ಥಿತರಿದ್ದರು.