ಧಾರವಾಡ: ಅನುದಾನರಹಿತ ವಿದ್ಯಾಸಂಸ್ಥೆಗಳಿಗೆ ವೇತನ ಅನುದಾನ ನೀಡಬೇಕು ಎಂದು ಒತ್ತಾಯಿಸಿ ಇಲ್ಲಿ ಶುಕ್ರವಾರದಿಂದ ಆಮರಣ ಉಪವಾಸ ನಡೆಸುತ್ತಿರುವ ಮಾಜಿ ಸಚಿವ ಬಸವರಾಜ ಹೊರಟ್ಟಿ ಅವರ ಆರೋಗ್ಯ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಾಗಲು ವೈದ್ಯರು ಭಾನುವಾರ ಸಲಹೆ ನೀಡಿದ್ದಾರೆ.
ವೈದ್ಯರ ಪ್ರಕಾರ ಹೊರಟ್ಟಿಯವರು ಬೆನ್ನುನೋವು, ಅಧಿಕ ರಕ್ತದೊತ್ತಡ, ಜ್ವರದಿಂದ ಬಳಲುತ್ತಿದ್ದಾರೆ. ಆದರೆ, ವೈದ್ಯರ ಸಲಹೆಗೆ ಸಮ್ಮತಿ ನೀಡದ ಹೊರಟ್ಟಿ ಉಪವಾಸ ಮುಂದುವರಿಸಿದರು.
ಸಭೆಗೆ ಹೋಗೆನು: ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಫೆ. 25ರಂದು ಕರೆದಿರುವ ವಿಧಾನ ಪರಿಷತ್ ಸದಸ್ಯರ ಸಭೆಯಲ್ಲಿ ತಾವು ಪಾಲ್ಗೊಳ್ಳುವುದಿಲ್ಲ ಎಂದು ಮಾಜಿ ಸಚಿವ ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದ್ದಾರೆ.
ವರದಿಗಾರರ ಜೊತೆ ಮಾತನಾಡಿದ ಅವರು, ‘ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸುವತ್ತ ಸರ್ಕಾರ ದಿವ್ಯ ನಿರ್ಲಕ್ಷ್ಯ ತೋರಿದೆ’ ಎಂದು ದೂರಿದರು. ‘ಶಿಕ್ಷಣ ಸಚಿವರು ಶಿಕ್ಷಕರ ಸಮಸ್ಯೆಗೆ ಸ್ಪಂದಿಸುವ ಯಾವುದೇ ಭರವಸೆಯನ್ನು ನೀಡಿಲ್ಲ. ಅದೊಂದು ವಿಧಾನಪರಿಷತ್ ಸದಸ್ಯರ ಸಾಮಾನ್ಯ ಸಭೆ. ಹೀಗಾಗಿ ಆ ಸಭೆಗೆ ಯಾವುದೇ ಅರ್ಥವಿಲ್ಲ’ ಎಂದು ಹೇಳಿದರು.
‘ವಿಶ್ವೇಶ್ವರ ಹೆಗಡೆ ಕಾಗೇರಿಯವರು ಅತ್ಯಂತ ಅಸಮರ್ಥ ಶಿಕ್ಷಣ ಸಚಿವರಾಗಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.