ಮಂಡ್ಯ: ಭ್ರಷ್ಟಾಚಾರ ವಿರೋಧಿಸಿ ಧರಣಿ ನಡೆಸುತ್ತಿದ್ದ ಬಾಬಾ ರಾಮದೇವ್ ಅವರನ್ನು ಬಂಧಿಸಿದ ಪೊಲೀಸರ ಕ್ರಮವನ್ನು ವಿರೋಧಿಸಿ, ಕೇಂದ್ರದ ನಿಲುವನ್ನು ಖಂಡಿಸಿ ಮಂಗಳವಾರವು ಧರಣಿ ಮುಂದುವರಿದಿದ್ದು, ಪ್ರತಿಭಟನಾಕಾರರು ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆಯನ್ನು ನಡೆಸಿದರು.
ಪತಂಜಲಿ ಟ್ರಸ್ಟ್ನ ನೇತೃತ್ವದಲ್ಲಿ ಕಳೆದ ಮೂರು ದಿನದಿಂದ ಪ್ರತಿಭಟನೆ ನಡೆಯುತ್ತಿದ್ದು, ಬಾಬಾ ಅವರನ್ನು ಬಂಧಿಸುವ ಮೂಲಕ ಕೇಂದ್ರ ಸರ್ಕಾರ ಪ್ರತಿಭಟನೆಯನ್ನು ಹತ್ತಿಕ್ಕುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯುತ್ತಿರುವ ಧರಣಿಯಲ್ಲಿ ಬೇಬಿ ಮಠದ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ,, ಜಿಲ್ಲಾಬಿಜೆಪಿ ಅಧ್ಯಕ್ಷ ಎಚ್.ಪಿ.ಮಹೇಶ್, ಕಾಡಾ ಅಧ್ಯಕ್ಷ ಡಿ.ರಾಮಲಿಂಗಯ್ಯ, ಅಭಿನವ ಭಾರತಿ ಸಂಸ್ಥೆಯ ಅನಂತಕುಮಾರ್ ಸ್ವಾಮೀಜಿ ಸಿದ್ದರಾಜು, ಹೇಮಂತ್, ಮಲ್ಲಿಕಾರ್ಜುನ ಮತ್ತಿತರರು ಇದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಡಿ.ರಾಮಲಿಂಗಯ್ಯ, ಕಪ್ಪು ಹಣ ವಾಪಸು ತರಬೇಕು ಎಂದು ಆಗ್ರಹಿಸಿ ಧರಣಿ ನಡೆಸುತ್ತಿದ್ದ ಬಾಬಾ ಅವರನ್ನು ಬಂಧಿಸುವ ಮೂಲಕ ಸರ್ಕಾರ ಪ್ರತಿಭಟನೆಯನ್ನು ಹತ್ತಿಕ್ಕುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.