ದಾವಣಗೆರೆ: ಜಿಲ್ಲಾಧಿಕಾರಿ ಪಿ.ಎಸ್. ವಸ್ತ್ರದ್ ಅವರು ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ವಿವಿಧ ದಲಿತ ಸಂಘಟನೆಗಳ ಮುಖಂಡರು ಡಾ.ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮವನ್ನು ಮಂಗಳವಾರ ಬಹಿಷ್ಕರಿಸಿದ ಘಟನೆ ನಡೆದಿದೆ.
ಆರಂಭದಲ್ಲಿ ಬಾಬು ಜಗಜೀವನರಾಂ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಬಳಿಕ ಜಿಲ್ಲಾಧಿಕಾರಿಗೆ ತಮ್ಮ ಬೇಡಿಕೆಯ ಪಟ್ಟಿ ನೀಡಿದಾಗ ಜಿಲ್ಲಾಧಿಕಾರಿ ನಿರ್ಲಕ್ಷ್ಯದಿಂದ ವರ್ತಿಸಿದರು ಎಂದು ದಲಿತ ಸಂಘಟನೆಯ ಪದಾಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಯ ಈ ವರ್ತನೆ ಖಂಡಿಸಿ ತಾವು ಸಮಾರಂಭದ ಉಪಾಹಾರವನ್ನು ಬಹಿಷ್ಕರಿಸಿರುವುದಾಗಿ ಡಾ.ಬಾಬು ಜಗಜೀವನರಾಂ, ಡಾ.ಬಿ.ಆರ್. ಅಂಬೇಡ್ಕರ್ ದಲಿತ ಸಂಘಟನೆಗಳ ಕ್ರಿಯಾ ಸಮಿತಿಯ ಪ್ರಕಟಣೆಯಲ್ಲಿ ಅಂಬೇಡ್ಕರ್ ಸಂಘದ ಅಧ್ಯಕ್ಷ ಬಿ.ಎಚ್. ವೀರಭದ್ರಪ್ಪ, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಎಲ್.ಎಂ. ಹನುಮಂತಪ್ಪ, ಕಾರ್ಯದರ್ಶಿ ನೀಲಗಿರಿಯಪ್ಪ ಇತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.