ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾರದ ಪ್ರೋತ್ಸಾಹಧನ: ಹಾಲು ಉತ್ಪಾದಕ ಕಂಗಾಲು

Last Updated 11 ಜನವರಿ 2012, 8:15 IST
ಅಕ್ಷರ ಗಾತ್ರ

ಶಿವಮೊಗ್ಗ: ಸರ್ಕಾರ ರೈತರ ಅನುಕೂಲಕ್ಕಾಗಿ ಹಾಲಿನ ದರ ಏರಿಕೆ ಮಾಡಿದೆ; ಆದರೆ, ಇದೇ ಸರ್ಕಾರ ರೈತರಿಗೆ ನೀಡಬೇಕಾದ ಕೋಟ್ಯಂತರ ರೂಪಾಯಿ ಪ್ರೋತ್ಸಾಹಧನವನ್ನು ಕಳೆದ ಐದು ತಿಂಗಳಿನಿಂದ ಬಾಕಿ ಉಳಿಸಿಕೊಂಡಿದೆ.

ಇತ್ತೀಚೆಗೆ ಸರ್ಕಾರ ಲೀಟರ್ ಹಾಲಿಗೆ ಮೂರು ರೂಪಾಯಿ ಏರಿಕೆ ಮಾಡಿದ್ದು, ಇದರಲ್ಲಿ ರೂ. 2.85 ಪೈಸೆ ಹಣವನ್ನು ರೈತರಿಗೆ ತತಕ್ಷಣದಿಂದ ನೀಡಲು ಆದೇಶಿಸಿದೆ. ಈ ಮೂಲಕ ಗ್ರಾಹಕರ ಜೇಜಿಗೆ ಬರೆ ಹಾಕಿದ ಸರ್ಕಾರ ತಾನು ರೈತರಿಗೆ ಕೊಡಬೇಕಾದ ಹಣವನ್ನು ಕೊಡಲು ಮಾತ್ರ ಮರೆತಿದೆ.

ಶಿವಮೊಗ್ಗ ಸಹಕಾರ ಹಾಲು ಒಕ್ಕೂಟ (ಶಿಮೂಲ್) ವ್ಯಾಪ್ತಿಯಲ್ಲಿ ಶಿವಮೊಗ್ಗ, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಿದ್ದು, ಇವುಗಳಿಂದ ಒಟ್ಟು ಅಂದಾಜು 42,000 ಹಾಲು ಹಾಕುವ ಸದಸ್ಯರಿದ್ದಾರೆ. ದಿನ ಒಂದಕ್ಕೆ `ಶಿಮೂಲ್~ಗೆ ಸರಾಸರಿ 2.35 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತದೆ. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಘೋಷಿಸಿದ್ದ ರೂ. 2 ಪ್ರೋತ್ಸಾಹಧನ `ಶಿಮೂಲ್~ ವ್ಯಾಪ್ತಿಯ 42 ಸಾವಿರ ಸದಸ್ಯರಿಗೆ ಕಳೆದ ಆಗಸ್ಟ್‌ನಿಂದ ಡಿಸೆಂಬರ್‌ವರೆಗೆ ಬಂದಿಲ್ಲ.

`ಶಿಮೂಲ್~ ವ್ಯಾಪ್ತಿಯಲ್ಲಿನ ಸದಸ್ಯರಿಗೆ ಪ್ರತಿ ತಿಂಗಳು ಸರ್ಕಾರ ಅಂದಾಜು ರೂ. 1.40 ಕೋಟಿ ಪ್ರೋತ್ಸಾಹಧನ ನೀಡಬೇಕಾಗುತ್ತದೆ. ಐದು ತಿಂಗಳಿಗೆ ಒಟ್ಟು ರೂ. 7 ಕೋಟಿ ಕೊಡಬೇಕಾಗಿದೆ. ಸರ್ಕಾರ ಇಷ್ಟೂ ಹಣವನ್ನು ಬಾಕಿ ಉಳಿಸಿಕೊಂಡಿದೆ.

`ಈ ಹಿಂದೆ ಖಾಸಗಿ ಡೈರಿಗೆ ಹಾಲು ಹಾಕುತ್ತಿದ್ದೆವು. ಸರ್ಕಾರ ನೀಡುವ ಪ್ರೋತ್ಸಾಹ ನೆಚ್ಚಿಕೊಂಡೇ ಅಲ್ಲಿ ನಿಲ್ಲಿಸಿ ಈಗ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕೊಡಲು ಆರಂಭಿಸಿದೆವು. ಆದರೆ, ಇದುವರೆಗೂ ನಮಗೆ ಪ್ರೋತ್ಸಾಹಧನ ಸಿಕ್ಕಿಲ್ಲ~ ಎಂದು ಅಸಮಾಧಾನ ವ್ಯಕ್ತಪಡಿಸುತ್ತಾರೆ ಭದ್ರಾವತಿ ಅರಹತೊಳಲು ಮಂಜಪ್ಪ.

ಈ ಮಧ್ಯೆ ಮೇವಿನ ಕೊರತೆ ಬೇರೆ ಇದೆ. ಪಶು ಆಹಾರದ ಬೆಲೆ ದಿಢೀರನೆ ಏರಿಕೆ ಕಂಡಿದೆ. ಈಗ ಸರ್ಕಾರ ಲೀ.ಗೆ ರೂ. 2.85  ಬೆಲೆ ಏರಿಸಿದೆ ನಿಜ. ಆದರೆ, ಅದರ ಜತೆಗೆ ಸರ್ಕಾರವೂ ನೀಡಬೇಕಾದ ರೂ. 2  ಕಾಲಕಾಲಕ್ಕೆ ಬಿಡುಗಡೆ ಮಾಡಿದರೆ ನಮಗೂ ಸ್ವಲ್ಪ ನೆಮ್ಮದಿ ಎನ್ನುವ ಮಾತು ಅವರದ್ದು.

ರೈತರಿಗೆ ನೀಡಬೇಕಾದ ಈ ಪ್ರೋತ್ಸಾಹಧನವನ್ನು ಬಜೆಟ್‌ನಲ್ಲೇ ಹಂಚಿಕೆ ಮಾಡಲಾಗಿದೆ. ಒಂದು ವೇಳೆ ಸರ್ಕಾರ ವಂಚನೆ ಮಾಡಿದರೂ ನ್ಯಾಯಾಲಯಕ್ಕೆ ಹೋಗಿ ಅನುದಾನ ಪಡೆದುಕೊಳ್ಳಬಹುದು. ಸರ್ಕಾರ ಅತೀ ಶೀಘ್ರವೇ ಈ ಹಣ ಬಿಡುಗಡೆ ಮಾಡುವುದು ಉತ್ತಮ ಎಂದು ಎಚ್ಚರಿಕೆ ನೀಡುತ್ತಾರೆ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಕೆ.ಟಿ. ಗಂಗಾಧರ್. 

`ಕಳೆದ ವರ್ಷದಲ್ಲಿ ಜುಲೈವರೆಗೂ ಪ್ರೋತ್ಸಾಹಧನ ಬಿಡುಗಡೆಯಾಗಿತ್ತು. ಅಲ್ಲಿಂದ 5ತಿಂಗಳು ಬಿಡುಗಡೆಯಾಗಿಲ್ಲ. ಸದ್ಯದ್ದಲ್ಲೇ 3 ತಿಂಗಳ ಪ್ರೋತ್ಸಾಹಧನ ಬಿಡುಗಡೆಯಾಗಲಿದೆ. ಇದಕ್ಕೆ ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಬೇಕಿದೆ. ಈ ಹಣ ಬಂದೇ ಬರುತ್ತದೆ. ರೈತರು ಭಯಪಡಬೇಕಿಲ್ಲ~ ಎನ್ನುತ್ತಾರೆ `ಶಿಮೂಲ್~ ವ್ಯವಸ್ಥಾಪಕ ನಿರ್ದೇಶಕ ಪಿ.ಡಿ. ಹಂಪಾಳಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT