ಉಡುಪಿ: `ಬಾಲ ಕಾರ್ಮಿಕ ಪದ್ಧತಿಯ ಸಂಪೂರ್ಣ ನಿರ್ಮೂಲನೆ ಸವಾಲಾಗಿದ್ದು, ಇದಕ್ಕಾಗಿ ಆಂದೋಲನವನ್ನೇ ನಡೆಸಬೇಕಾಗಿದೆ' ಎಂದು ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ಎ.ಪ್ರಭಾಕರ್ ಶರ್ಮ ಹೇಳಿದರು.
ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಸಂಯುಕ್ತ ಆಶ್ರಯದಲ್ಲಿ ಮಣಿಪಾಲದ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಬಾಲ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ತರಬೇತಿ ಕಾರ್ಯಾ ಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿ. 14 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕೆಲಸಗಳಲ್ಲಿ ದುಡಿಸುವುದು ಅಪರಾಧ. ಮಕ್ಕಳಿಗೆ ಶಿಕ್ಷಣವನ್ನು ಒದಗಿಸುವ ಮೂಲಕ ಅವರ ಉಜ್ವಲ ಭವಿಷ್ಯಕ್ಕೆ ಎಲ್ಲರು ಸಹಕರಿಸಬೇಕು. ಬಾಲಕಾರ್ಮಿಕ ಕಾಯ್ದೆಯ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸ್ತ್ರೀ ಶಕ್ತಿ ಗುಂಪಿನವರಿಗೆ ತರಬೇತಿ ನೀಡುವುದು ಉತ್ತಮ ಎಂದು ಅವರು ಅಭಿಪ್ರಾಯಪಟ್ಟರು.
ಹಾಸನ ಉಪ ಕಾರ್ಮಿಕ ಆಯುಕ್ತ ಡಾ.ಬಾಲಕೃಷ್ಣ ಸಿ.ಎಚ್, ಉಡುಪಿ ನಗರಸಭೆಯ ಪೌರಾಯುಕ್ತ ಗೋಕುಲ್ದಾಸ್ ನಾಯ್ಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ರೀಟಾ ಮಾಡ್ತ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ನಾಗೇಂದ್ರ ಮಧ್ಯಸ್ಥ, ಉಡುಪಿ ಕಾರ್ಮಿಕ ಅಧಿಕಾರಿ ದೇವರಾಜು, ಮಂಗಳೂರು ಸಹಾಯಕ ಕಾರ್ಮಿಕ ಆಯುಕ್ತ ಡಿ.ಜಿ. ನಾಗೇಶ್ ಮುಖ್ಯ ಅತಿಥಿಗಳಾಗಿದ್ದರು.
ಜಿಲ್ಲಾ ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ಪ್ರಭಾಕರ್ ಆಚಾರ್ಯ ಸ್ವಾಗತಿಸಿದರು. ಕಾರ್ಮಿಕ ಇಲಾಖೆಯ ಜೀವನ್ ಕುಂದರ್ ವಂದಿಸಿದರು. ರವಿಕುಮಾರ್ ಕಾರ್ಯಕ್ರಮ ನಿರುಪಿಸಿದರು.