ಇಲ್ಲಿನ ಸಂತೆಪೇಟೆ ಸರ್ಕಾರಿ ಪ್ರೌಢಶಾಲೆಯ ಆರನೇ ತರಗತಿಯ ವಿದ್ಯಾರ್ಥಿನಿಗೆ ಶಿಕ್ಷಕ ರಾಜಪ್ಪ ಕಳೆದ ಗುರುವಾರ ಲೈಂಗಿಕ ಕಿರುಕುಳ ನೀಡಿದ್ದರು. ಈ ವಿಚಾರ ತಡವಾಗಿ ಪಾಲಕರಿಗೆ ತಿಳಿಯಿತು. ಸೋಮವಾರ ನೂರಾರು ಜನರು ಬಂದು ಶಾಲೆ ಮುಂದೆ ಪ್ರತಿಭಟನೆ ಆರಂಭಿಸಿದ್ದರು. ಸ್ಥಳಕ್ಕೆ ಬಂದ ಪೆನ್ಶನ್ ಮೊಹಲ್ಲಾ ಠಾಣೆಯ ಸಬ್ಇನ್ಸ್ಪೆಕ್ಟರ್ ಮೋಹನ ಕುಮಾರ್, ಪ್ರತಿಭಟನೆಯಲ್ಲಿ ತೊಡಗಿದ್ದ ಇಬ್ಬರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಥಳಿಸಿದರು ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಜನರು ಶಾಲಾ ಆವರಣದಿಂದ ಪೊಲೀಸ್ ಠಾಣೆಗೆ ಬಂದು ಪ್ರತಿಭಟನೆ ಆರಂಭಿಸಿದರು. ಶಾಸಕ ಎಚ್.ಎಸ್. ಪ್ರಕಾಶ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದು ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದರು. ಬಾಲಕಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಶಿಕ್ಷಕನನ್ನು ಅಮಾನತು ಮಾಡಲಾಗಿದೆ ಎಂದು ಡಿಡಿಪಿಐ ಬಸವರಾಜ್ ತಿಳಿಸಿದ್ದಾರೆ.