ಬೆಂಗಳೂರು: ಬಾಲ್ಯವಿವಾಹಗಳು ನಡೆಯದಂತೆ ಜಾಗೃತಿ ಮೂಡಿಸಲು ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಕಾರ್ಯಾಗಾರಗಳನ್ನು ಆಯೋಜಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಉಮಾಶ್ರೀ ಅಧಿಕಾರಿಗಳಿಗೆ ಸೂಚಿಸಿದರು.
ನಗರದಲ್ಲಿ ಗುರುವಾರ ರಾಜ್ಯದ ಎಲ್ಲ ಜಿಲ್ಲೆಗಳ ಇಲಾಖೆಯ ಉಪ ನಿರ್ದೇಶಕರು ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳ ಜತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಬಾಲ್ಯವಿವಾಹ ಪ್ರಕರಣಗಳು ಹೆಚ್ಚು ನಡೆಯುತ್ತಿರುವುದು ವರದಿಯಾಗಿದೆ. ಆದ್ದರಿಂದ, ಬಾಲ್ಯವಿವಾಹ ತಡೆ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಸಲಹೆ ನೀಡಿದರು.
ಸರ್ಕಾರದ ಸೌಲಭ್ಯಗಳ ಬಗ್ಗೆ ಅಂಗವಿಕಲರಿಗೆ ಮತ್ತು ಮಹಿಳೆಯರಿಗೆ ಸಮರ್ಪಕವಾದ ಮಾಹಿತಿಯೇ ಇಲ್ಲ. ವಾರ್ತಾ ಇಲಾಖೆ ಸಹಯೋಗ ದೊಂದಿಗೆ ಜಿಲ್ಲಾಮಟ್ಟದಲ್ಲಿ ಇಲಾಖೆಗಳ ಸೌಲಭ್ಯಗಳ ಬಗ್ಗೆ ಪ್ರಚಾರಾಂದೋಲನ ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.