ವಿಜಾಪುರ: ಬಾಲ್ಯ ವಿವಾಹದಿಂದ ಆಗುತ್ತಿರುವ ದುಷ್ಪರಿಣಾಮಗಳ ಕುರಿತು ಎಲ್ಲರಲ್ಲೂ ಜಾಗೃತಿ ಮೂಡಿಸಬೇಕು ಎಂದು ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ಘಟಕ, ಸಿ.ಎ.ಸಿ.ಎಲ್ ಜಾಲದ ಸ್ವಯಂ ಸೇವಾ ಸಂಸ್ಥೆಗಳ ಆಶ್ರಯದಲ್ಲಿ ಬಾಲ್ಯ ವಿವಾಹ ನಿಷೇಧ ಕುರಿತು ಇತ್ತೀಚೆಗೆ ಇಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸೈಕಲ್ ಜಾಥಾ ಮತ್ತು ಕಲಾ ಜಾಥಾ ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿದ್ದ ಜಿ.ಪಂ. ಸಿಇಒ ಎ.ಎನ್. ಪಾಟೀಲ, ಬಾಲ್ಯ ವಿವಾಹ ತಡೆಗಟ್ಟಲು ವಿವಿಧ ಇಲಾಖೆಗಳಿಗೆ ಅಧಿಕಾರ ನೀಡಲಾಗಿದೆ. ಬಾಲ್ಯ ವಿವಾಹ ಪ್ರೋತ್ಸಾಹಿಸುವ ವ್ಯಕ್ತಿಗಳಿಗೆ, ಪಾಲಕರಿಗೆ, ಸಂಘ- ಸಂಸ್ಥೆಗಳವನ್ನೂ ಸಹ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದರು.
ಎಎಸ್ಪಿ ಅಜಯ್ ಹಲೋರಿ, ಬಾಲ್ಯ ವಿವಾಹ ತಡೆಗಟ್ಟಲು ಪೊಲೀಸ್ ಇಲಾಖೆಯಿಂದ ಎಲ್ಲ ರೀತಿಯ ಸಹಾಯ ಸಹಕಾರ ನೀಡುವುದಾಗಿ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಡಿ.ಪಿ. ವಸಂತಪ್ರೇಮ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ವಾಸುದೇವ ತೋಳಬಂದಿ, ಬಸವನ ಬಾಗೇವಾಡಿ ತಾಲ್ಲೂಕಿನ ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿ ಕೆ.ವೈ. ಉಕ್ಕಳಿ, ರಿಚ್ ಸಂಸ್ಥೆಯ ಅಧ್ಯಕ್ಷ ಬೂದಪ್ಪ ಇತರರು ಉಪಸ್ಥಿತರಿದ್ದರು.
ಹಾಲುಮತ ಸಮಾಜಕ್ಕೆ ಅನ್ಯಾಯ: ಆರೋಪ
ಜಮಖಂಡಿ: ರಾಷ್ಟ್ರೀಯ ಪಕ್ಷಗಳು ಹಾಲುಮತ ಜನಾಂಗವನ್ನು ಗುರುತಿಸಿಲ್ಲ. ದುಡ್ಡಿಗಾಗಿ ಮತ ಮಾರಿಕೊಳ್ಳುವುದು ನಿಲ್ಲಬೇಕು. ಸಮಾಜದ ಒಟ್ಟಾರೆ ಅಭಿವೃದ್ಧಿಗೆ ಸಂಘಟನೆ ಅಗತ್ಯ ಎಂದು ಜವಳಿ ಖಾತೆ ಸಚಿವ ವರ್ತೂರ ಪ್ರಕಾಶ ಹಾಲುಮತ ಜನಾಂಗಕ್ಕೆ ಸಲಹೆ ನೀಡಿದರು.
ರಾಜ್ಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಗ್ರಾಮೀಣ ಅಭಿವೃದ್ಧಿ ಸಂಘದ ಆಶ್ರಯದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಗ್ರಾಮೀಣ ಅಭಿವೃದ್ಧಿ ಸಂಘದ ಹಿರೇಪಡಸಲಗಿ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹಾಲುಮತ ಜನಾಂಗಕ್ಕೆ ಆರ್ಥಿಕ ಸಂಕಷ್ಟದಿಂದ ಮುಂದೆ ಹೋಗಲು ಆಗುತ್ತಿಲ್ಲ. ಸಾಮಾಜಿಕ ನ್ಯಾಯ ದೊರೆಯುತ್ತಿಲ್ಲ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.