ಉಡುಪಿ:`ಬಾಲ್ಯದಿಂದಲೇ ಕನ್ನಡ ಭಾಷೆಯನ್ನು ಗೌರವಿಸಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರು ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇತ್ತೀಚೆಗೆ ಶಿವಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಮಾಸದ ಸರಣಿ ಕಾರ್ಯಕ್ರಮ `ರಾಜ್ಯೋತ್ಸವ ತಿಂಗಳ ಸಡಗರ'ದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಕನ್ನಡ ಭಾಷೆಯನ್ನು ಗೌರವಿಸಿ ಅಭಿಮಾನ ಪಡೋಣ. ಕನ್ನಡ ನಾಡು, ನುಡಿ, ಸಂಸ್ಕೃತಿ, ಸಾಹಿತ್ಯಗಳ ಸಂರಕ್ಷಣೆ ಮತ್ತು ಸಂವರ್ಧನೆಗಾಗಿ ಒಮ್ಮತದಿಂದ ದುಡಿದು ನಾಡಿನ ಸೇವೆ ಮಾಡೋಣ ಎಂದು ಹೇಳಿದರು.
ಕಾರ್ಕಳ ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಸಿ.ರಾವ್ ಶಿವಪುರ, ಜಿಲ್ಲಾ ಗೌರವ ಕೋಶಾಧಿಕಾರಿ ಸುಬ್ರಹ್ಮಣ್ಯ ಬಾಸ್ರಿ, ಗೌರವ ಕಾರ್ಯದರ್ಶಿ ನಾರಾಯಣ ಮಡಿ, ಉಡುಪಿ ತಾಲ್ಲೂಕು ಅಧ್ಯಕ್ಷ ಪ್ರೊ. ಉಪೇಂದ್ರ ಸೋಮಯಾಜಿ ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾದ್ಯಾಯಿನಿ ಯಶೋದಾ ಸ್ವಾಗತಿಸಿದರೆ, ಕಾರ್ಕಳ ತಾಲ್ಲೂಕಿನ ಕಾರ್ಯದರ್ಶಿ ಮುರಳೀಧರ ಭಟ್ ವಂದಿಸಿದರು. ಕನ್ನಡ ಪ್ರಾಧ್ಯಾಪಕ ಪರಮೇಶ್ವರ ಹೆಬ್ಬಾರ್ ಕಾರ್ಯಕ್ರಮ ನಿರೂಪಿಸಿದರು.