ಬೆಂಗಳೂರು: ರಾಜ್ಯ ಸರ್ಕಾರ ಬಹುಮತ ಕಳೆದುಕೊಂಡಿರುವ ಬಗ್ಗೆ ರಾಜ್ಯಪಾಲರನ್ನು ಭೇಟಿ ಮಾಡಿ, ಮನದಟ್ಟು ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ನೀಡಿರುವ ಹೇಳಿಕೆಗೆ ಮಹತ್ವ ನೀಡಬೇಕಾದ ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮಂಗಳವಾರ ಇಲ್ಲಿ ಪ್ರತಿಕ್ರಿಯೆ ನೀಡಿದರು.
`ಇದು ಹೊಸದಲ್ಲ. ಯಡಿಯೂರಪ್ಪ ಅನೇಕ ಬಾರಿ ಈ ರೀತಿ ಹೇಳುತ್ತಿದ್ದಾರೆ. ಪ್ರತಿಬಾರಿಯೂ ನಾನು ಪ್ರತಿಕ್ರಿಯಿಸಬೇಕಾದ ಅಗತ್ಯ ಇಲ್ಲ' ಎಂದು ಪರೋಕ್ಷವಾಗಿ ತಿರುಗೇಟು ನೀಡಿದರು.
ಮೂರು ವರ್ಷ ಅವಧಿ ಪೂರೈಸಿರುವ ನಿಗಮ - ಮಂಡಳಿಗಳ ಅಧ್ಯಕ್ಷರನ್ನು ಬದಲಾಯಿಸಿ, ಹೊಸಬರಿಗೆ ಅವಕಾಶ ಮಾಡಕೊಡಲಾಗುತ್ತಿದೆ. ಕೋರ್ ಕಮಿಟಿ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಧಾರದಂತೆ ಈ ಕ್ರಮಕೈಗೊಳ್ಳಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡುವ ಅಗತ್ಯವಿಲ್ಲ. ಲೋಕಾಯುಕ್ತ ವಿಚಾರಣೆ ಪೂರ್ಣಗೊಂಡ ನಂತರ ವರದಿ ಆಧರಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.