ನವದೆಹಲಿ (ಪಿಟಿಐ): ರಾಜಧಾನಿ ದೆಹಲಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಿರುವ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು.
ಅಶೋಕ ರಸ್ತೆಯಲ್ಲಿರುವ ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಕಚೇರಿಯಲ್ಲಿ ಭಾನುವಾರ ಬೆಳಿಗ್ಗೆಯಿಂದಲೇ ಜಮಾಯಿಸಿದ್ದ ಪಕ್ಷದ ನೂರಾರು ಕಾರ್ಯಕರ್ತರು ಪಕ್ಷದ ಪರವಾಗಿ ಘೋಷಣೆಗಳನ್ನು ಕೂಗಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಪಕ್ಷದ ಹಿರಿಯ ಮುಖಂಡ ಮುಖ್ತರ್ ಅಬ್ಬಾಸ್ ನಖ್ವಿ ಡೋಲು ಬಾರಿಸುವ ಮೂಲಕ ಕಾರ್ಯಕರ್ತರ ಆಚರಣೆಯಲ್ಲಿ ಭಾಗಿಯಾದರು. ಮುಖ್ಯಮಂತ್ರಿ ಅಭ್ಯರ್ಥಿ ಹರ್ಷವರ್ಧನ ಅವರ ಕೃಷ್ಣ ನಗರದ ನಿವಾಸದಲ್ಲಿ ಹಬ್ಬದ ವಾತಾವರಣ ಕಂಡುಬಂತು.
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಭಾವಚಿತ್ರ ಮತ್ತು ಪೋಸ್ಟರ್ಗಳನ್ನು ಹಿಡಿದು ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಿದ್ದ ದೃಶ್ಯ ಅಲ್ಲಲ್ಲಿ ಸಾಮಾನ್ಯವಾಗಿತ್ತು.
ಕಾಂಗ್ರೆಸ್ ಕಚೇರಿಯಲ್ಲಿ ಮೌನ: ಚುನಾವಣೆಯಲ್ಲಿ ಮೂರನೇ ಸ್ಥಾನಕ್ಕೆ ಇಳಿಯುವ ಮೂಲಕ ಹೀನಾಯ ಸೋಲನುಭವಿಸಿದ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ರಾಜ್ಯ ಕಚೇರಿ ಹಾಗೂ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ನಿವಾಸದಲ್ಲಿ ನೀರವ ಮೌನ ಆವರಿಸಿತ್ತು.
ಮತದಾರರಿಗೆ ಧನ್ಯವಾದ
ನವದೆಹಲಿ (ಐಎಎನ್ಎಸ್): ಪಕ್ಷದ ಮೇಲೆ ವಿಶ್ವಾಸವಿಟ್ಟು ಚುನಾವಣೆಯಲ್ಲಿ ಬೆಂಬಲಿಸಿದಕ್ಕಾಗಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಹರ್ಷವರ್ಧನ ದೆಹಲಿ ಜನತೆಗೆ ಧನ್ಯವಾದ ಸಲ್ಲಿಸಿದ್ದಾರೆ.