ವಿಜಾಪುರ: ಅಡುಗೆ ಅನಿಲ ಸಿಲಿಂಡರ್ಗಳ ಬಳಕೆಗೆ ಮಿತಿ ವಿಧಿಸಿರುವುದೂ ಸೇರಿದಂತೆ ಕೇಂದ್ರ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಕ್ಷದ ಮಹಿಳಾ ಮೋರ್ಚಾದ ಜಿಲ್ಲಾ ಘಟಕದ ಕಾರ್ಯಕರ್ತರು ಶುಕ್ರವಾರ ಇಲ್ಲಿ ಪ್ರತಿಭಟನೆ ನಡೆಸಿದರು.
ಇಲ್ಲಿಯ ಸಿದ್ಧೇಶ್ವರ ದೇವಸ್ಥಾನದಿಂದ ಮೆರವಣಿಗೆಯಲ್ಲಿ ಹೊರಟು, ಗಾಂಧಿ ಚೌಕ್ನಲ್ಲಿ ಕೆಲಕಾಲ ಧರಣಿ ನಡೆಸಿದರು. ಚಿಕ್ಕ ಮಕ್ಕಳಿಗೆ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವೇಷಭೂಷಣ ತೊಡಿಸಿ, ಅವರಿಗೆ ಒಣ ಹಿಟ್ಟು ತಿನ್ನಿಸುವ ಮೂಲಕ ಪ್ರತಿಭಟನೆ ನಡೆಸಿದರು.
ಕೇಂದ್ರದ ಯುಪಿಎ ಸರ್ಕಾರವು ಅಡುಗೆ ಅನಿಲ ಸಿಲಿಂಡರ್ ಪೂರೈಕೆ ಕಡಿತಗೊಳಿಸುವ ಮೂಲಕ ದೇಶದ ಜನತೆಯು ಊಟ ಮಾಡದೇ ಉಪವಾಸ ಇರುವಂತೆ ಸೂಚಿಸಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಘಟಕದ ಉಪಾಧ್ಯಕ್ಷೆ ಮಂಗಳಾದೇವಿ ಬಿರಾದಾರ ಟೀಕಿಸಿದರು.
ವಿಧಾನ ಪರಿಷತ್ ಸದಸ್ಯ ನಾರಾಯಣಸಾ ಭಾಂಡಗೆ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಕವಟಗಿ ಮಾತನಾಡಿದರು. ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷೆ ಪದ್ಮಾವತಿ ಗುಡಿ, ನಗರ ಘಟಕ ಅಧ್ಯಕ್ಷ ಎಚ್.ಆರ್, ಮಾಚಪ್ಪನವರ, ರಾಜು ಮಗಿಮಠ, ಶಿವರುದ್ರ ಬಾಗಲಕೋಟ, ಭಾರತಿ ಸಂಗಣ್ಣನವರ, ಶಾಮಲಾ ಮುಂದೇವಾಲೆ, ಸುನಂದಾ ಯಾದವ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.