ಬೆಂಗಳೂರು: ಮೋದಿ ವಿದ್ಯಮಾನದ ನಂತರ, ಬಿಜೆಪಿಯಲ್ಲಿ ವಿಲೀನಗೊಳ್ಳಲು ಕರ್ನಾಟಕ ಜನತಾ ಪಕ್ಷ ಮಾನಸಿಕವಾಗಿ ಸಿದ್ಧವಾಗಿದೆ. ಈ ವಿಷಯವನ್ನು ಗುರುವಾರ ಬೆಳಿಗ್ಗೆ ಇಲ್ಲಿನ ಮಲ್ಲೇಶ್ವರದ ಕೆನರಾ ಯೂನಿಯನ್ನಲ್ಲಿ ನಡೆಯುವ ಪಕ್ಷದ ಕಾರ್ಯಕಾರಿಣಿಯಲ್ಲಿ ಮುಖಂಡರಿಗೆ ತಿಳಿಸಲು ನಿರ್ಧರಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪಕ್ಷದ ಪ್ರಮುಖರ ಸಭೆ (ಕೋರ್ ಕಮಿಟಿ) ಬುಧವಾರ ಸಂಜೆ ನಡೆಯಲಿದೆ. ಬಿಜೆಪಿಯಲ್ಲಿ ಕೆಜೆಪಿ ವಿಲೀನ ಸೇರಿದಂತೆ ಮುಂಬರುವ ಲೋಕಸಭಾ ಚುನಾವಣೆ ಕುರಿತು ಈ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ.
ಸಂಜೆ 4.30ಕ್ಕೆ ಡಾಲರ್ರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಅವರ ನಿವಾಸದಲ್ಲಿ ನಡೆಯುವ ಸಭೆಯಲ್ಲಿ ಶೋಭಾ ಕರಂದ್ಲಾಜೆ, ವಿ.ಧನಂಜಯಕುಮಾರ್, ಎಂ.ಡಿ.ಲಕ್ಷ್ಮೀನಾರಾಯಣ ಮತ್ತಿತರರು ಭಾಗವಹಿಸಲಿದ್ದಾರೆಎಂದು ಪಕ್ಷದ ಮೂಲಗಳು ತಿಳಿಸಿವೆ.
ನರೇಂದ್ರ ಮೋದಿ ಅವರನ್ನು ಬಿಜೆಪಿಯ ಪ್ರಧಾನಿ ಅಭ್ಯರ್ಥಿಯೆಂದು ಘೋಷಣೆ ಮಾಡಿದ ನಂತರ ಅದನ್ನು ಯಡಿಯೂರಪ್ಪ ಸ್ವಾಗತ ಮಾಡಿದ್ದರು. ಇದಕ್ಕೆ ಪೂರಕವಾಗಿ ಆ ಪಕ್ಷದ ಮುಖಂಡ ಧನಂಜಯಕುಮಾರ್ ಅವರು ಮೋದಿ ಅವರಿಗೆ ಪತ್ರ ಬರೆದು, ಹಿಂದೆ ಆಗಿರುವ ಎಲ್ಲ ಕಹಿ ಘಟನೆಗಳನ್ನು ಮರೆತು ಒಟ್ಟಿಗೆ ಹೋಗುವ ಅಗತ್ಯ ಇದೆ ಎಂದು ತಿಳಿಸಿದ್ದಾರೆ.