ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಿಂದ ಪ್ರಜಾತಂತ್ರ ಹಾಳು

Last Updated 3 ಅಕ್ಟೋಬರ್ 2012, 5:25 IST
ಅಕ್ಷರ ಗಾತ್ರ

ರಾಯಚೂರು: ಭಾರತೀಯ ಜನತಾ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಪ್ರಜಾತಂತ್ರ ವ್ಯವಸ್ಥೆಯನ್ನೇ ಹಾಳು ಮಾಡಿದೆ. ವಿದ್ಯುತ್, ಕುಡಿಯುವ ನೀರು ಪೂರೈಕೆ ಸಮರ್ಪಕ ರೀತಿ ಮಾಡಲೂ ಸರ್ಕಾರಕ್ಕೆ ಆಗುತ್ತಿಲ್ಲ. ಭ್ರಷ್ಟಾಚಾರ, ಹಗರಣದಲ್ಲಿ ಮುಳುಗಿರುವ ಬಿಜೆಪಿ ಸರ್ಕಾರದ ಲೋಪಗಳನ್ನು ಜನಮನ ಗಮನಕ್ಕೆ ತರಬೇಕು.

ಕಾಂಗ್ರೆಸ್ ಪರ ಜನತೆಯನ್ನು ಒಲೈಸಿಕೊಳ್ಳುವ ಪ್ರಯತ್ನ ಮಾಡಬೇಕು. ಅದಕ್ಕಾಗಿಯೇ ಕಾಂಗ್ರೆಸ್‌ಗೆ ಬನ್ನಿ ಬದಲಾವಣೆ ತನ್ನಿ ಕಾರ್ಯಕ್ರಮವನ್ನು ರಾಜ್ಯವ್ಯಾಪಿ ಆಯೋಜಿಸಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಎನ್.ಎಸ್ ಬೋಸರಾಜ ಹೇಳಿದರು.

ಇಲ್ಲಿನ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಾಲಯದ ಆವರಣದಲ್ಲಿ ಆಯೋಜಿಸಿದ್ಧ `ಕಾಂಗ್ರೆಸ್‌ಗೆ ಬನ್ನಿ ಬದಲಾವಣೆ ತನ್ನಿ~ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಪಕ್ಷದ ಸಂಘಟನೆ, ಸಂಪರ್ಕ ವ್ಯವಸ್ಥೆ ಸುಧಾರಣೆಗೆ ಕೆಪಿಸಿಸಿ ಎಲ್ಲ ರೀತಿಯ ಗಮನ ಹರಿಸಿದೆ. 6 ಲಕ್ಷ ಕಾರ್ಯಕರ್ತರಿಗೆ ತರಬೇತಿ, ಮಾರ್ಗದರ್ಶನ ನೀಡಲಾಗಿದೆ. ಪಕ್ಷದ ಈ ಕಾರ್ಯಕ್ರಮ ಎಲ್ಲ ಹಂತದಲ್ಲೂ ಅನುಷ್ಠಾನಗೊಳಿಸಬೇಕಿದೆ. ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಸೇರಿಕೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ತಾಲ್ಲೂಕು ಮಟ್ಟದ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ಜನತೆ ಎದುರಿಸುವ ಸಮಸ್ಯೆಗಳನ್ನು ತೆಗೆದುಕೊಂಡು ಹೋರಾಟ ಮಾಡಬೇಕು ಎಂದು ವಿವರಿಸಿದರು.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಪಾರಸ್‌ಮಲ್ ಸುಖಾಣಿ ಮಾತನಾಡಿ, ಪಕ್ಷದ ನಾಯಕರಲ್ಲಿ ಹೊಂದಾಣಿಕೆ ಇದ್ದರೆ ಪಕ್ಷದ ಏಳ್ಗೆ ಸಾಧ್ಯ. ತಮ್ಮದೇ ಮಾತು ನಡೆಯಬೇಕು ಎಂಬ ಮನೋಭಾವ ಸರಿಯಲ್ಲ. ಇದರಿಂದ ಪಕ್ಷಕ್ಕೆ ಹೊಡೆತ ಬೀಳುತ್ತದೆ. ಭಿನ್ನಮತ ಬಿಟ್ಟು ಪಕ್ಷ ಬಲವರ್ಧನೆಗೆ ಮುಂದಾಗಬೇಕು. ಕಾರ್ಯಕರ್ತರು ಈ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ತಿಳಿಸಿದರು.

ಪ್ರಾಸ್ತಾವಿಕ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಎ ವಸಂತಕುಮಾರ ಅವರು, ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಜನತೆಯ ವಿಶ್ವಾಸ ಕಳೆದುಕೊಂಡಿದೆ. ಜನತೆಯ ಸಮಸ್ಯೆ ಪರಿಹಾರಕ್ಕೆ ಕಾಂಗ್ರೆಸ್ ಪಕ್ಷ ಹೋರಾಟ ನಡೆಸುತ್ತ ಬಂದಿದೆ. ರಾಜಕೀಯ ವ್ಯವಸ್ಥೆ ಕಲುಷಿತಗೊಳಿಸಿ ರಾಜ್ಯದ ಜನತೆ ತಲೆ ತಗ್ಗಿಸುವಂತೆ ಮಾಡಿದೆ. ಈ ಸರ್ಕಾರದ ದುರಾಡಳಿತ ಕೊನೆಗಾಣಿಸಲು ಕಾಂಗ್ರೆಸ್‌ಗೆ ಬನ್ನಿ ಬದಲಾವಣೆ ತನ್ನಿ ಕಾರ್ಯಕ್ರಮ ಯಶಗೊಳಿಸಬೇಕು. ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಶ್ರಮಿಸಬೇಕು ಎಂದು ಹೇಳಿದರು.

ಮಾಜಿ ಸಂಸದ ಎ ವೆಂಕಟೇಶ ನಾಯಕ, ಶಾಸಕರಾದ ರಾಜಾ ರಾಯಪ್ಪ ನಾಯಕ, ಹಂಪಯ್ಯ ನಾಯಕ, ಜಿ.ಪಂ ಸದಸ್ಯರಾದ ಕೆ ಶರಣಪ್ಪ, ಅಸ್ಲಂ ಪಾಷಾ,  ಆರ್‌ಎಪಿಎಂಸಿ ಅಧ್ಯಕ್ಷ ಜಯವಂತರಾವ್ ಪತಂಗೆ, ಪಕ್ಷದ ಮುಖಂಡರಾದ ನರಸನಗೌಡ, ಶರಣಪ್ಪ ಮೇಟಿ, ರವಿಂದ್ರ ಜಾಲ್ದಾರ, ತಾಯಣ್ಣ ನಾಯಕ, ಸಿದ್ಧನಗೌಡ ಗಾರಲದಿನ್ನಿ, ಸುಧಾಮ, ತಾ.ಪಂ ಅಧ್ಯಕ್ಷ ಪಿ ಚಂದ್ರಶೇಖರರೆಡ್ಡಿ, ಜಿಲ್ಲಾ ಕಾಂಗ್ರೆಸ್ ಯುವ ಘಟಕ ಅಧ್ಯಕ್ಷ ಜಿ.ಎಸ್ ಮಲ್ಲಿಕಾರ್ಜುನ, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಅಕ್ಕಮಹಾದೇವಿ, ಮಾಜಿ ಶಾಸಕ ಬಸವರಾಜ ಪಾಟೀಲ್ ಇಟಗಿ ಇತರರು ವೇದಿಕೆಯಲ್ಲಿದ್ದರು.

ಪಕ್ಷದ ನಗರ ಘಟಕ ಅಧ್ಯಕ್ಷ ಜಿ ಬಸವರಾಜರೆಡ್ಡಿ ಸ್ವಾಗತಿಸಿದರು. ಅಮರೇಗೌಡ ಹಂಚಿನಾಳ ನಿರೂಪಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT