ರಾಮನಗರ: ಚನ್ನಪಟ್ಟಣದ ಶೇರ್ವ ಹೋಟೆಲ್ ಬಳಿ ಇತ್ತೀಚೆಗೆ ಪೊಲೀಸರ ಮೇಲಿನ ಹ್ಲ್ಲಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಮಾಯಕರನ್ನು ಬಂಧಿಸಿದ್ದಾರೆ. ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಬಂಧಿತರ ಕುಟುಂಬದ ಸದಸ್ಯರು ಜಿಲ್ಲಾಧಿಕಾರಿ ಎಸ್.ಪುಟ್ಟಸ್ವಾಮಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
`ಈ ಘಟನೆಗೆ ಸಂಬಂಧ ಇಲ್ಲದವರನ್ನೆಲ್ಲ ಪೊಲೀಸರು ಬಂಧಿಸಿ ಕಿರುಕುಳ ನೀಡುತ್ತಿದ್ದಾರೆ. ಇವರ ಬಂಧನದಿಂದ 14 ಕುಟುಂಬಗಳು ಬೀದಿಗೆ ಬಿದ್ದಿವೆ~ ಎಂದು ಮುಸ್ಲಿಂ ಮಹಿಳೆಯರು ಅಳಲು ತೋಡಿಕೊಂಡರು.
ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಪುಟ್ಟಸ್ವಾಮಿ ಅವರು, ಈ ಕುರಿತು ಪರಿಶೀಲನೆ ನಡೆಸಿ ಅಮಾಯಕರಿಗೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸುತ್ತೇನೆ ಎಂದರು.
ಅದರ ಜತೆಗೆ ಆ ಘಟನೆಯಲ್ಲಿ ಹಲ್ಲೆಗೊಳಗಾದ ಪೊಲೀಸ್ ಅಧಿಕಾರಿ ವಿರುದ್ಧವೂ ದೂರು ಬಂದಿದ್ದು, ಅದನ್ನೂ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದರು.
ಅಕ್ರಮ ಮದ್ಯ ಮಾರಾಟ ಇಬ್ಬರ ಬಂಧನ
ಮಾಗಡಿ: ತಾಲ್ಲೂಕಿನಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಚಕ್ರಬಾವಿ ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಮಾಗಡಿ ಪೊಲೀಸರು ಚಕ್ರಬಾವಿ ಗ್ರಾಮದಲ್ಲಿರುವ ಅಂಗಡಿಗಳಲ್ಲಿ ತಪಾಸಣೆ ನಡೆಸಿದರು.
ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರು ವರ್ತಕರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ. ಪಟ್ಟಣದ ತಿರುಮಲ ಗ್ರಾಮದಲ್ಲಿ ದೇವಾಲಯದ ಸುತ್ತಮುತ್ತ ರಥಬೀದಿಗಳಲ್ಲಿರುವ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟವಾಗುತ್ತಿದ್ದು ಇದನ್ನು ತಡೆಗಟ್ಟುವಂತೆ ನಿವಾಸಿಗಳು ಮನವಿ ಮಾಡಿದ್ದಾರೆ.