ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಇನ್ನೆರಡು ದಿನಗಳೊಳಗೆ ರೂ 400 ಕೋಟಿ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಆದೇಶಿಸಿದ್ದಾರೆ. ಗುರುವಾರ `ಪ್ರಜಾವಾಣಿ~ಯೊಂದಿಗೆ ಮಾತನಾಡಿದ ಮೇಯರ್ ಡಿ.ವೆಂಕಟೇಶಮೂರ್ತಿ ಈ ವಿಷಯ ತಿಳಿಸಿದರು.
`ಪಾಲಿಕೆಯ ಗುತ್ತಿಗೆದಾರರಿಗೆ ನೀಡಬೇಕಾದ ಬಾಕಿ ಮೊತ್ತ ಪಾವತಿ ಹಾಗೂ ಪಾಲಿಕೆಯ ನಿರ್ವಹಣೆಗಾಗಿ 1,200 ಕೋಟಿ ಅನುದಾನಕ್ಕೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಬುಧವಾರ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಪಾಲಿಕೆಗೆ ಅಗತ್ಯವಿರುವ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಲಾಯಿತು. ಮೊದಲ ಕಂತಿನ ಹಣವಾಗಿ 400 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿಯವರು ಆದೇಶ ನೀಡಿದ್ದಾರೆ. ಇನ್ನೆರಡು ದಿನಗಳಲ್ಲಿ ಹಣ ಪಾಲಿಕೆಗೆ ಬರಲಿದೆ~ ಎಂದು ಅವರು ತಿಳಿಸಿದರು.
`ಪಾಲಿಕೆಗೆ ಹಣ ಬಂದ ನಂತರ ಜೇಷ್ಠತೆಯ ಆಧಾರದ ಮೇಲೆ ಗುತ್ತಿಗೆದಾರರ ಬಾಕಿ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು. ನಗರದ ಎಲ್ಲ ಸಮಸ್ಯೆಗಳಿಗೆ ಹಂತ ಹಂತವಾಗಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುತ್ತಿದೆ~ ಎಂದರು.