ಭದ್ರಾವತಿ: ಎಐಟಿಯುಸಿ ಕರೆಯ ಮೇರೆಗೆ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಕಾರ್ಯಕರ್ತರು ಶುಕ್ರವಾರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಇಲ್ಲಿನ ಕೆಎಸ್ಆರ್ಟಿಸಿ ಬಸ್ನಿಲ್ದಾಣದಿಂದ ಮೆರವಣಿಗೆ ಹೊರಟ ನೂರಾರು ಮಹಿಳೆಯರು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಘೋಷಣೆ ಕೂಗುತ್ತಾ ತಾ.ಪಂ. ಕಚೇರಿ ತಲುಪಿದರು.
ಅಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಮುಖಂಡರು, ಅಡುಗೆ ತಯಾರಕರ ಸಮಸ್ಯೆಗಳ ಕುರಿತಂತೆ ಸರ್ಕಾರ ನಿರ್ಲಕ್ಷ್ಯ ತೋರಿರುವುದು ಖಂಡನೀಯ. ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.
ಬಿಪಿಎಲ್ ಹಾಗೂ ಭಾಗ್ಯಲಕ್ಷ್ಮೀ ಯೋಜನೆ ಬಾಂಡ್ ಪಡೆದ ಕುಟುಂಬದ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು. ಮಕ್ಕಳ ಸಂಖ್ಯೆ ಕಡಿಮೆಯಿದೆ ಎಂದ ಮಾತ್ರಕ್ಕೆ ತಮ್ಮನ್ನು ಕೆಲಸದಿಂದ ತೆಗೆಯಬಾರದು. ನಿವೃತ್ತಿ ವಯಸ್ಸನ್ನು 60ಕ್ಕೆ ನಿಗದಿ ಮಾಡಬೇಕು ಸೇರಿದಂತೆ 13 ಬೇಡಿಕೆಗಳಿಗೆ ಸರ್ಕಾರ ಬೆಂಬಲ ನೀಡಬೇಕು ಎಂದು ಮುಖಂಡರು ಆಗ್ರಹಿಸಿದರು.
ತಾ.ಪಂ. ಅಧಿಕಾರಿಗಳು ಪ್ರತಿಭಟನಾ ನಿರತರ ಮನವಿ ಸ್ವೀಕರಿಸಿ ಸರ್ಕಾರಕ್ಕೆ ವರದಿ ನೀಡುವ ಭರವಸೆ ನೀಡಿದರು.ಇದರ ನೇತೃತ್ವವನ್ನು ಪದಾಧಿಕಾರಿಗಳಾದ ಹನುಮಮ್ಮ, ವಿಮಲಾಬಾಯಿ, ಸುಶೀಲಾ, ಲತಾ, ಸರಸ್ವತಿ,ರೇಣಿಕಾಬಾಯಿ ಸೇರಿದಂತೆ ಇನ್ನಿತರರು ವಹಿಸಿದ್ದರು.