ಕೊಪ್ಪಳ: ನಗರದ ಕೇಂದ್ರೀಯ ಬಸ್ ನಿಲ್ದಾಣದ ಆವರಣದಲ್ಲಿ ಈಚೆಗೆ ಜಿಲ್ಲಾ ಕಾರ್ಮಿಕ ಯೋಜನಾ ಸಂಘ, ಜಿಲ್ಲಾಡಳಿತದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಜನ ಜಾಗೃತಿ ಬೀದಿ ನಾಟಕ ಪ್ರದರ್ಶನ ಯಶಸ್ವಿಯಾಯಿತು.
ನಾಟಕ ಪ್ರದರ್ಶನದ ಉದ್ಘಾಟನೆಯನ್ನು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಟಿ.ಕೃಷ್ಣಮೂರ್ತಿ ನೆರವೇರಿಸಿದರು. ಅಧ್ಯಕ್ಷತೆಯನ್ನು ವಿಭಾಗೀಯ ಸಂಚಾರ ನಿಯಂತ್ರಣಾಧಿಕಾರಿ ವಿವೇಕಾನಂದ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಮಹಾಂತೇಶ ಸಜ್ಜನ್, ಘಟಕದ ವ್ಯವಸ್ಥಾಪಕ ಬಿ.ವೈ.ಭಟ್ಟರ್, ಕಾರ್ಮಿಕ ಕಲ್ಯಾಣ ಅಧಿಕಾರಿ ಮಹಾಂತೇಶ, ಬಾಲ ಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡ್ರ ಪಾಲ್ಗೊಂಡಿದ್ದರು.
ನಂತರ ಕಲಾವಿದ ಶಿವಮೂರ್ತಿ ಮೇಟಿ ನೇತೃತ್ವದ ಚೇತನ ಸಾಂಸ್ಕೃತಿಕ ಕಲಾ ಸಂಸ್ಥೆ ಕಲಾವಿದರು ಜಾಗೃತಿ ಗೀತೆಗಳು ಹಾಗೂ `ಕಳಿಸಬ್ಯಾಡವ್ವ ಕೆಲಸಕ್ಕ' ಎಂಬ ನಾಟಕವನ್ನು ಪ್ರದರ್ಶಿಸಿದರು.