ನವದೆಹಲಿ (ಪಿಟಿಐ): ರಾಜಸ್ತಾನದಲ್ಲಿ ಸುಮಾರು 600 ಕೋಟಿ ರೂಪಾಯಿಗೂ ಅಧಿಕ ಬೆಲೆ ಬಾಳುವ ಕೃಷಿ ಭೂಮಿಯನ್ನು ಅಕ್ರಮವಾಗಿ ವಶಪಡಿಸಿಕೊಂಡಿರುವ ಗುಜರಾತ್ ರಾಜ್ಯಪಾಲರಾದ ಕಮಲಾ ಬೆನಿವಾಲ್ ಅವರನ್ನು ತಕ್ಷಣ ಹುದ್ದೆಯಿಂದ ತೆಗೆದು ಹಾಕುವಂತೆ ಬಿಜೆಪಿ ನಿಯೋಗ ರಾಷ್ಟ್ರಪತಿಯನ್ನು ಒತ್ತಾಯಿಸಿದೆ.
ಬುಧವಾರ ಪ್ರತಿಭಾ ಪಾಟೀಲ್ ಅವರನ್ನು ಭೇಟಿ ಮಾಡಿದ ಪಕ್ಷದ ರಾಷ್ಟ್ರೀಯ ಘಟಕದ ಅಧ್ಯಕ್ಷ ನಿತಿನ್ ಗಡ್ಕರಿ ನೇತೃತ್ವದ ನಿಯೋಗ, ತನ್ನ ಆರೋಪಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಹಸ್ತಾಂತರಿಸಿತು.
ಬಿಜೆಪಿ ಹಿರಿಯ ನಾಯಕ ಎಲ್. ಕೆ.ಅಡ್ವಾಣಿ, ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್ ಮತ್ತು ಇತರ ನಾಯಕರ ಗೈರುಹಾಜರಿ ಎದ್ದು ಕಾಣುತ್ತಿತ್ತು. ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎಂಬ ಸುದ್ದಿಗಳಿಗೆ ಅನೇಕ ನಾಯಕರ ಗೈರುಹಾಜರಿ ಪುಷ್ಟಿ ನೀಡುವಂತಿತ್ತು.