ಬೆಂಗಳೂರು: `ಆಹಾರ ಪದಾರ್ಥಗಳು ಮತ್ತು ಪೆಟ್ರೋಲ್ ದರ ಏರಿಕೆ ವಿರೋಧಿಸಿ ಕಾರ್ಮಿಕ ಸಂಘಗಳ ಜಂಟಿ ಕ್ರಿಯಾ ಸಮಿತಿಯು ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಇದೇ 23 ರಂದು ರಾಜಭವನ ಚಲೋ ಧರಣಿ ಹಮ್ಮಿಕೊಂಡಿದೆ~ ಎಂದು ಐಎನ್ಟಿಯುಸಿ ರಾಜ್ಯ ಘಟಕದ ಕಾರ್ಯದರ್ಶಿ ಎಚ್.ರಾಮರಾವ್ ತಿಳಿಸಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು `ಈಗಾಗಲೇ ಆಹಾರ ಪದಾರ್ಥಗಳು ಬೆಲೆ ಏರಿಕೆಯಿಂದ ಮಧ್ಯಮ ವರ್ಗದ ಜನತೆ ಜೀವನ ನಡೆಸುವುದು ಕಷ್ಟವಾಗಿದೆ. ಪೆಟ್ರೋಲ್, ಅಡುಗೆ ಅನಿಲ ದರ ಹೆಚ್ಚಳದಿಂದ ಜನರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಹೇರಿದಂತಾಗಿದೆ~ ಎಂದು ದೂರಿದರು.
`ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ನೆಪವೊಡ್ಡಿ ಸಾರ್ವಜನಿಕರ ಜೀವನದೊಂದಿಗೆ ಚೆಲ್ಲಾಟ ನಡೆಸುತ್ತಿವೆ. ಮತ್ತೆ ಅಡುಗೆ ಅನಿಲ ಹಾಗೂ ಪೆಟ್ರೋಲ್ ದರ ಹೆಚ್ಚಿಸಲು ಹುನ್ನಾರ ನಡೆಯುತ್ತಿದೆ. ಬೆಲೆ ಏರಿಕೆ ನಿಯಂತ್ರಣ ಮಾಡುವಂತೆ ಒತ್ತಾಯಿಸಿ ರಾಜ್ಯಪಾಲರಿಗೆ ಮನವಿ ನೀಡಲಿದ್ದೇವೆ~ ಎಂದರು.
ಅಂದು ನಡೆಯುವ ಧರಣಿಗೆ ಎಲ್ಲಾ ಕಾರ್ಮಿಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ ಎಂದರು.
ಸಿಐಟಿಯು ಕಾರ್ಯದರ್ಶಿ ಎಸ್. ಪ್ರಸನ್ನಕುಮಾರ್, ಎಐಟಿಯುಸಿ ಕಾರ್ಯದರ್ಶಿ ಕೆ.ಸೋಮಶೇಖರ್, ಟಿಯುಸಿಸಿ ಕಾರ್ಯದರ್ಶಿ ಜಿ.ಆರ್. ಶಿವಶಂಕರ್ ಉಪಸ್ಥಿತರಿದ್ದರು.