ಹೊಸಕೋಟೆ: ದೇಶದಲ್ಲಿ ಬೆಲೆ ಏರಿಕೆ ಹಾಗೂ ನಿರುದ್ಯೋಗ ಸಮಸ್ಯೆ ಹೆಚ್ಚಿರುವುದರಿಂದ ಸಾಮಾನ್ಯ ಜನರ ಬದುಕು ದುಸ್ತರವಾಗಿದೆ ಎಂದು ಸಿಪಿಐ (ಎಂ) ಜಿಲ್ಲಾ ಕಾರ್ಯದರ್ಶಿ ಕೆ.ಎನ್. ಉಮೇಶ್ ಆತಂಕ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ನಡೆದ ಸಿಪಿಐ (ಎಂ) ತಾಲ್ಲೂಕು ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, `ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಅವು ಜನಹಿತ ಕಾಪಾಡುವ ಬದಲು ಜನವಿರೋಧಿ ನೀತಿ ಅನುಸರಿಸುತ್ತಿವೆ~ ಎಂದು ಆರೋಪಿಸಿದರು.
ಎಚ್.ಎನ್.ಮೋಹನ್ಬಾಬು ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿದ್ದ ಜಿಲ್ಲಾ ಮುಖಂಡ ಚಂದ್ರ ತೇಜಸ್ವಿ, ವಕೀಲ ಹರೀಂದ್ರ, ಪಿ.ಮುನಿರಾಜು ಮಾತನಾಡಿದರು. ಆರ್.ಆರ್. ಮನೋಹರ್ ಧ್ವಜಾರೋಹಣ ನೆರವೇರಿಸಿದರು.
ತಾಲ್ಲೂಕಿನಲ್ಲಿ ಸಮರ್ಪಕ ಪಡಿತರ, ಅಡಿಗೆ ಅನಿಲ ವಿತರಿಸಬೇಕು. ಕಾರ್ಮಿಕರಿಗೆ ಕನಿಷ್ಠ ಹತ್ತು ಸಾವಿರ ರೂಪಾಯಿ ವೇತನ ನಿಗದಿಪಡಿಸಬೇಕು. ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸಬೇಕು.
ಕಾರ್ಮಿಕರ ಮೇಲೆ ಮಾಲೀಕರಿಂದ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಸಭೆ ನಿರ್ಣಯ ಅಂಗೀಕರಿಸಿತು.