ಬೆಂಗಳೂರು: ದ.ರಾ. ಬೇಂದ್ರೆ ಕಾವ್ಯ ಕೂಟವು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ದ.ರಾ. ಬೇಂದ್ರೆ ಸ್ಮೃತಿ ಲೇಖನ ಸ್ಪರ್ಧೆಯಲ್ಲಿ ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ಎಂ.ಎ. (ಕನ್ನಡ) ಪ್ರಥಮ ವರ್ಷದ ವಿದ್ಯಾರ್ಥಿ ಎಂ. ಮರಿಸ್ವಾಮಿ ಪ್ರಥಮ ಬಹುಮಾನ ಪಡೆದಿದ್ದಾರೆ.
ಮೊದಲ ಬಹುಮಾನಕ್ಕೆ ರೂ. 4 ಸಾವಿರ ನಗದು ಬಹುಮಾನ ನೀಡಲಾಗುತ್ತದೆ. ಬೆಂಗಳೂರು ವಿಶ್ವವಿದ್ಯಾಲಯದ ಪ್ರಥಮ ವರ್ಷದ ಎಂ.ಎ (ಕನ್ನಡ) ವಿಭಾಗದ ವಿದ್ಯಾರ್ಥಿ ಎಚ್. ದಿನೇಶ್ ಹಾಗೂ ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಎಂ.ಎ. (ಕನ್ನಡ) ಪ್ರಥಮ ವರ್ಷದ ವಿದ್ಯಾರ್ಥಿ ಕೆ.ಎಂ. ನಾಗೇಶ್ ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಬಹುಮಾನ ಪಡೆದಿದ್ದಾರೆ. ದ್ವಿತೀಯ ಬಹುಮಾನ ರೂ. 3 ಸಾವಿರ ಹಾಗೂ ತೃತೀಯ ಬಹುಮಾನವು 2 ಸಾವಿರ ರೂಪಾಯಿ ನಗದು ಒಳಗೊಂಡಿದೆ.
ಬೇಂದ್ರೆ ಜನ್ಮ ದಿನವಾದ ಜ. 31ರಂದು ಸಂಜೆ 5.30ಕ್ಕೆ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಗುತ್ತದೆ ಎಂದು ದ.ರಾ. ಬೇಂದ್ರೆ ಕಾವ್ಯ ಕೂಟದ ಅಧ್ಯಕ್ಷ ಡಾ.ಜಿ. ಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.