ಹರಿಹರ: ಅಂಗನವಾಡಿ ಕಾರ್ಯಕರ್ತೆ ಯರು ಹಾಗೂ ಸಹಾಯಕಿಯರ ವಿವಿಧ ಬೇಡಿಕೆ ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹಾಕಲಾಗುವುದು ಎಂದು ಶಾಸಕ ಬಿ.ಪಿ. ಹರೀಶ್ ಭರವಸೆ ನೀಡಿದರು.
ನಗರದ ಗುರುಭವನದಲ್ಲಿ ಮಂಗಳವಾರ ನಡೆದ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಗೌರವಧನ ಈಗಾಗಲೇ ಹೆಚ್ಚಳ ಮಾಡಲಾಗಿದೆ. ಆದರೆ, ಬೆಲೆ ಏರಿಕೆಯ ಈ ದಿನಗಳಲ್ಲಿ ನೀಡುತ್ತಿರುವ ಗೌರವಧನ ಯಾವುದಕ್ಕೂ ಸಾಲುತ್ತಿಲ್ಲ. ನಿವೃತ್ತಿ ನಂತರ ಸರ್ಕಾರ ನೀಡುವ ವೇತನವನ್ನು ಹೆಚ್ಚಳ ಮಾಡಲು ಪ್ರಯತ್ನಿಸುತ್ತೇನೆ. ಅಂಗವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ವಿವಿಧ ಬೇಡಿಕೆಗಳನ್ನು ವಿಧಾನಸಭೆ ಅಧಿವೇಶನದ ಸಂದರ್ಭದಲ್ಲಿ ಸರ್ಕಾರದ ಗಮನಕ್ಕೆ ತರುತ್ತೇನೆ ಎಂದರು.
ತಹಶೀಲ್ದಾರ್ ಜಿ. ನಜ್ಮಾ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಚಿಕ್ಕಮಕ್ಕಳನ್ನು ಆರೈಕೆ ಮಾಡುವ ಮಹತ್ವದ ಜವಾಬ್ದಾರಿ ನಿರ್ವಹಿಸುವ ಜತೆಗೆ, ಸರ್ಕಾರದ ಇತರೆ ಕೆಲಸಗಳನ್ನು ನಿರ್ವಹಿಸುತ್ತಾ ಬಂದಿದ್ದಾರೆ. ಗಣತಿ ಕಾರ್ಯದಲ್ಲೂ ಸಹಕಾರ ನೀಡುತ್ತಿದ್ದಾರೆ. ಅವರ ಕಾರ್ಯ ಶ್ಲಾಘನೀಯ. ಅವರಿಗೆ ಉತ್ತಮ ಗೌರವಧನ ದೊರೆಯುವಂತಾಗಲಿ ಎಂದು ಆಶಿಸಿದರು.ಈ ಸಂದರ್ಭದಲ್ಲಿ ಹಲವು ವರ್ಷ ಸೇವೆ ಸಲ್ಲಿಸಿ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಗೌರವ ಸಲ್ಲಿಸಲಾಯಿತು.
ನಗರಸಭೆ ಅಧ್ಯಕ್ಷೆ ರಾಧಾ ಸಿ.ಎನ್. ಹುಲಿಗೇಶ್, ಸ್ಥಾಯಿ ಸಮಿತಿ ಅಧ್ಯಕ್ಷೆ ಶೀಲಾ ಕೊಟ್ರೇಶ್, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ. ರುದ್ರಗೌಡ, ತಾ.ಪಂ. ಇಒ ಎಚ್.ಎನ್. ರಾಜ್, ಸಿಪಿಐ ನಾಗೇಶ್ ಐತಾಳ್, ಸಿಡಿಪಿಒ ಜಿ.ಸಿ. ಚಂದ್ರಪ್ಪ, ಸಿದ್ದನಗೌಡ, ಎಚ್.ಜಿ. ಹೇಮಂತಕುಮಾರ್ ಹಾಗೂ ಇತರರು ಉಪಸ್ಥಿತರ್ದ್ದಿದರು.