ಧಾರವಾಡ: ‘ಶಿಕ್ಷಕರ ಸಮಸ್ಯೆಗಳನ್ನು ಈಡೇರಿಸುವವರೆಗೆ ಆಮರಣ ಉಪವಾಸ ಸತ್ಯಾಗ್ರಹವನ್ನು ಕೈಬಿಡುವುದಿಲ್ಲ’ ಎಂದು ಕರ್ನಾಟಕ ಮಾಧ್ಯಮಿಕ ಶಾಲಾ ನೌಕರರ ಸಂಘದ ಅಧ್ಯಕ್ಷರೂ ವಿಧಾನ ಪರಿಷತ್ ಸದಸ್ಯರೂ ಆದ ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದರು. ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ನಗರದ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ಎದುರು ಶುಕ್ರವಾರ ಅವರು ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸಿದರು.
ಸಂಜೆ ಸ್ಥಳಕ್ಕೆ ಸಂಸದ ಪ್ರಹ್ಲಾದ ಜೋಶಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಭೇಟಿ ನೀಡಿ ಸತ್ಯಾಗ್ರಹ ಕೈಬಿಡುವಂತೆ ಕೋರಿಕೊಂಡಾಗ ಕೈಬಿಡುವುದಿಲ್ಲ ಎಂದು ಹೊರಟ್ಟಿಯವರು ಪಟ್ಟು ಹಿಡಿದರು. ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಖುದ್ದಾಗಿ ಶಿಕ್ಷಕರ ಸಮಸ್ಯೆಗಳನ್ನು ಆಲಿಸಬೇಕು. ನಮ್ಮನ್ನು ಆಹ್ವಾನಿಸುವರೆಗೆ ಆಮರಣ ಉಪವಾಸ ಸತ್ಯಾಗ್ರಹವನ್ನು ಬಿಡೆವು. ಇದಕ್ಕಾಗಿ ಸತ್ರೂ ಚಿಂತೆ ಮಾಡುವುದಿಲ್ಲ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.