ಬೆಂಗಳೂರು: ನಗರದ ಬೇಗೂರು ರಸ್ತೆಯಲ್ಲಿ ಬುಧವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎಲೆಕ್ಟ್ರಾನಿಕ್ ಸಿಟಿ ಠಾಣೆಯ ಹೆಡ್ ಕಾನ್ಸ್ಟೆಬಲ್ ಎಸ್. ಸುರೇಶ್ (59) ಎಂಬುವರು ಸಾವನ್ನಪ್ಪಿದ್ದಾರೆ.
ಕೆಂಗೇರಿ ನಿವಾಸಿ ಸುರೇಶ್ ಬುಧವಾರ ರಾತ್ರಿ ಪಾಳಿ ಕರ್ತವ್ಯಕ್ಕೆ ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬೇಗೂರು ಸೇತುವೆಯ ಬಳಿ ಹಿಂದಿನಿಂದ ವೇಗವಾಗಿ ಬಂದ ಲಾರಿ ಅವರಿಗೆ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದು ತಲೆಗೆ ತೀವ್ರ ಪೆಟ್ಟಾದ ಅವರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಮೂಲತಃ ಉಡುಪಿಯ ಸುರೇಶ್ 1983ರಲ್ಲಿ ಪೊಲೀಸ್ ಸೇವೆಗೆ ಆಯ್ಕೆಯಾಗಿದ್ದರು. ನಗರದ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದ ಅವರು, 2006ರಲ್ಲಿ ಹೆಡ್ ಕಾನ್ಸ್ಟೆಬಲ್ ಆಗಿ ಬಡ್ತಿ ಪಡೆದಿದ್ದರು. ಘಟನೆಯ ನಂತರ ಲಾರಿ ಚಾಲಕ ಪರಾರಿಯಾಗಿದ್ದು, ಹುಡುಕಾಟ ನಡೆಯುತ್ತಿದೆ ಎಂದು ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸರು ತಿಳಿಸಿದ್ದಾರೆ.
ಬಾಲಕ ಸಾವು: ನಗರದ ವೈಟ್ಫೀಲ್ಡ್ ಸಮೀಪದ ಗುಂಜೂರು ರಸ್ತೆಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ರೋಹಿತ್ (15) ಎಂಬ ಬಾಲಕ ಸಾವನ್ನಪ್ಪಿದ್ದಾನೆ.
ರೋಹಿತ್, ತಂದೆ ರಮೇಶ್ ಅವರೊಂದಿಗೆ ಬೈಕ್ನಲ್ಲಿ ವರ್ತೂರಿನಿಂದ ಗುಂಜೂರಿಗೆ ಹೊರಟಿದ್ದ. ಅಪಘಾತ ಸಂಭವಿಸಿದ ವೇಳೆ ರಮೇಶ್ ಬೈಕ್ ಚಾಲನೆ ಮಾಡುತ್ತಿದ್ದರು. ಗುಂಜೂರು ರಸ್ತೆಯಲ್ಲಿ ಹಿಂದಿನಿಂದ ವೇಗವಾಗಿ ಬಂದ ಕಾಂಕ್ರಿಟ್ ಮಿಕ್ಸರ್ ಲಾರಿ ಅವರ ಬೈಕ್ಗೆ ಡಿಕ್ಕಿ ಹೊಡೆದಿದೆ. ಬೈಕ್ನಿಂದ ಕೆಳಗೆ ಬಿದ್ದ ರೋಹಿತ್ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ರಮೇಶ್ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ನಂತರ ಚಾಲಕ ರಜನಿ (23) ಠಾಣೆಗೆ ಶರಣಾಗಿದ್ದಾನೆ ಎಂದು ವೈಟ್ಫೀಲ್ಡ್ ಸಂಚಾರ ಪೊಲೀಸರು ಹೇಳಿದ್ದಾರೆ.