ಕಲಘಟಗಿ: ಹೋಬಳಿ ಹಂತದಲ್ಲಿ ಭತ್ತ ಹಾಗೂ ಗೋವಿನಜೋಳ ಖರೀದಿ ಕೇಂದ್ರವನ್ನು ಪ್ರಾರಂಭಿಸಿಬೇಕೆಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧಿಕಾಯನ್ನು ಒತ್ತಾಯಿಸಿದೆ.
ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದ ರೈತ ಭವನದಲ್ಲಿ ನಡೆದ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಬಿ.ಸಿ. ಪಾಟೀಲ ನೇತೃತ್ವದಲ್ಲಿ ಜರುಗಿದ ಸಭೆಯಲ್ಲಿ, ಜಿಲ್ಲಾಧಿಕಾರಿಗಳನ್ನು ಒತ್ತಾಯಿಸುವ ತೀರ್ಮಾನಕ್ಕೆ ಬರಲಾಯಿತು.
ಈಗಾಗಲೇ ಜಿಲ್ಲಾಧಿಕಾರಿಗಳಿಗೆ ರೈತರ ಪರವಾಗಿ ಮನವಿ ಸಲ್ಲಿಸಿದ್ದು, ಭತ್ತದ ಖರೀದಿ ಕೇಂದ್ರ ತೆರೆಯುವ ಭರವಸೆ ದೊರೆತಿದ್ದರೂ, ಇನ್ನೂ ಖರೀದಿ ಕೇಂದ್ರ ಪ್ರಾರಂಭವಾಗಿಲ್ಲ ಎಂದರು.
ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಗೋವಿನಜೋಳ ಖರೀದಿ ಕೇಂದ್ರವನ್ನು ಆರಂಭಿಸಲಾಗಿದ್ದರೂ, ಖರೀದಿಯನ್ನು ಇನ್ನಷ್ಟು ಚುರುಕುಗೊಳಿಸಬೇಕಿದ್ದು, ತೂಕದ ಯಂತ್ರ ಮತ್ತು ಸಿಬ್ಬಂದಿಗಳ ಅವಶ್ಯಕತೆ ಇದೆ ಎಂಬುದನ್ನು ಈ ಸಂದರ್ಭದಲ್ಲಿ ಹಾಜರಿದ್ದ ತಾಲ್ಲೂಕು ದಂಡಾಧಿಕಾರಿ ಕೆ.ಆರ್.ಕುಲಕರ್ಣಿ ಅವರಿಗೆ ಮನವರಿಕೆ ಮಾಡಲಾಯಿತು.
ಇದೇ 25ರ ಒಳಗಾಗಿ ಬೇಡಿಕೆ ಈಡೇರದೇ ಇದ್ದಲ್ಲಿ ಹೋರಾಟ ನಡೆಸಬೇಕಾಗುತ್ತ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಘಟಕದ ಚನ್ನಯ್ಯಹಂಚಿನಮನಿ, ಮಹದೇವಗೌಡ ಸಿದ್ಧನಗೌಡ್ರ, ಶಿವಪ್ಪ ಹಿಂಡಸಗೇರಿ, ಎಂ.ಕೆ.ತಡಸ, ರುದ್ರಪ್ಪ ಬಿಸರಳ್ಳಿ, ಚನ್ನಪ್ಪ ದೇವಿಕೊಪ್ಪ ಹಾಜರಿದ್ದರು.