ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಭವಾನಿ ಸಿಂಗ್ ಹೆಸರು ಇರಲಿಲ್ಲ'

ಜಯಲಲಿತಾ ಅಕ್ರಮ ಆಸ್ತಿ ಪ್ರಕರಣ: ಪ್ರಾಸಿಕ್ಯೂಟರ್ ನೇಮಕ
Last Updated 5 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಸಂಪಾದನೆ ಪ್ರಕರಣದ ವಿಚಾರಣೆಗೆ ನೇಮಕಗೊಂಡಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್ ಜಿ.ಭವಾನಿ ಸಿಂಗ್ ಹೆಸರನ್ನು ಈ ಸ್ಥಾನಕ್ಕೆ ನೇಮಕ ಮಾಡಲು ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯವರಿಗೆ ಸರ್ಕಾರ ಶಿಫಾರಸು ಮಾಡಿರಲಿಲ್ಲ ಎಂದು ಕರ್ನಾಟಕ ಸರ್ಕಾರ ಬುಧವಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

ಭವಾನಿ ಸಿಂಗ್ ಅವರನ್ನು ಈ ಪ್ರಕರಣದ ವಿಚಾರಣೆಯಿಂದ ವಾಪಸ್ ಕರೆಸಿಕೊಳ್ಳಲಾಗಿದೆ ಎಂದು ಆ. 26ರಂದು ಕರ್ನಾಟಕ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಜಯಲಲಿತಾ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ಈ ವಿವರಣೆ ನೀಡಿದೆ.

ಈ ಪ್ರಕರಣದಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕಕ್ಕೆ ನಾಲ್ವರ ಹೆಸರನ್ನು ಕರ್ನಾಟಕ ಸರ್ಕಾರವು ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯವರಿಗೆ ಸೂಚಿಸಿತ್ತು. ಈ ನಾಲ್ವರಲ್ಲಿ ಭವಾನಿ ಸಿಂಗ್ ಹೆಸರು ಇರಲಿಲ್ಲ. ಈ ವಿಚಾರವನ್ನು ಕರ್ನಾಟಕ ಪರ ವಕೀಲ ಎಂ.ಎನ್.ರಾವ್ ಅವರು ನ್ಯಾಯಮೂರ್ತಿಗಳಾದ ಬಿ.ಎಸ್. ಚೌಹಾಣ್ ಹಾಗೂ ಎಸ್.ಎ.ಬಾಬ್ಡೆ ಅವರಿದ್ದ ಪೀಠಕ್ಕೆ ತಿಳಿಸಿದರು. 
ಜಯಲಲಿತಾ ಸಲ್ಲಿಸಿದ ಅರ್ಜಿಗೆ ಕರ್ನಾಟಕ ಸರ್ಕಾರದ ಪರವಾಗಿ ಪ್ರತಿಕ್ರಿಯೆ ನೀಡಲು ರಾವ್ ಅವರು ಎರಡು ದಿನಗಳ ಗಡುವು ಕೇಳಿದರು. 

ಆದರೆ ಜಯಲಲಿತಾ ಪರ ವಕೀಲ ಮುಕುಲ್ ರೋಹ್ಟಗಿ ಅವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರು ಸೆಪ್ಟೆಂಬರ್ 30ಕ್ಕೆ ನಿವೃತ್ತಿಯಾಗಲಿದ್ದಾರೆ. ಹಾಗಾಗಿ ಸರ್ಕಾರವು ಈ ಪ್ರಕರಣದ ವಿಚಾರಣೆಯನ್ನು ವಿಳಂಬ ಮಾಡಲು ಹೊರಟಿದೆ ಎಂದರು.

ರಾವ್ ಮನವಿ ಪುರಸ್ಕರಿಸಿದ ಕೋರ್ಟ್, ಮುಂದಿನ ವಿಚಾರಣೆಯನ್ನು ಶುಕ್ರವಾರಕ್ಕೆ ಕಾಯ್ದಿರಿಸಿತು. ಮೂಲ ದಾಖಲೆ ಸಲ್ಲಿಸುವಂತೆಯೂ ಅದು ಸರ್ಕಾರಕ್ಕೆ ಸೂಚಿಸಿತು.

ಈ ಪ್ರಕರಣದಲ್ಲಿ ಹೊಸದಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ ಮಾಡಿಕೊಳ್ಳುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಆಗಸ್ಟ್ 30ರಂದು ಸುಪ್ರೀಂಕೋರ್ಟ್ ತಡೆ ನೀಡಿತ್ತು.

ಏನಿದು ಪ್ರಕರಣ: 1991 ಹಾಗೂ 1996ರಲ್ಲಿ ತಮಿಳುನಾಡು ಮುಖ್ಯಮಂತ್ರಿಯಾಗಿದ್ದಾಗ ರೂ 66.65 ಕೋಟಿ ಅಕ್ರಮ ಆಸ್ತಿ ಸಂಪಾದಿಸಿರುವ ಆರೋಪ ಜಯಲಲಿತಾ ಮೇಲಿದೆ. ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಈ ಪ್ರಕರಣವನ್ನು 2003ರಲ್ಲಿ ಬೆಂಗಳೂರಿಗೆ ವರ್ಗಾಯಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT