ಮಡಿಕೇರಿ: ಭಗಂಡೇಶ್ವರ- ತಲಕಾವೇರಿ ದೇವಾಲಯಗಳ ಪಾವಿತ್ರ್ಯ ಕಾಪಾಡುವ ದೃಷ್ಟಿಯಿಂದ ಅ.12 ರಿಂದ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ ಎಂದು ಭಗಂಡೇಶ್ವರ-ತಲಕಾವೇರಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮನು ಮುತ್ತಪ್ಪ ತಿಳಿಸಿದರು.
ಭಾಗಮಂಡಲದಲ್ಲಿ ಶುಕ್ರವಾರ ನಡೆದ ಅ.17ರಂದು ಬೆಳಗಿನ ಜಾವ ತಲಕಾವೇರಿಯಲ್ಲಿ ಜರುಗುವ ಪವಿತ್ರ ತೀರ್ಥೋದ್ಭವ ತುಲಾ ಸಂಕ್ರಮಣ ಜಾತ್ರೆ ಸಿದ್ಧತಾ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಭಕ್ತರು ತುಂಡು ಉಡುಗೆ ತೊಟ್ಟು ಬರುವುದನ್ನು ನಿಷೇಧಿಸಲಾಗಿದ್ದು, ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದರು. ಭಕ್ತಾದಿಗಳ ಅನುಕೂಲಕ್ಕಾಗಿ ಭಾಗಮಂಡಲ ಮತ್ತು ತಲಕಾವೇರಿಗಳಲ್ಲಿ ನಾಮಫಲಕಗಳನ್ನು ಅಳವಡಿಸಲಾಗುವುದು ಎಂದರು.
ತುಲಾ ಸಂಕ್ರಮಣ ಜಾತ್ರೆಗೆ ಎಲ್ಲಾ ರೀತಿಯ ಸಿದ್ಧತೆಗಳು ಭರದಿಂದ ನಡೆಯುತ್ತಿದ್ದು, ಈ ವರ್ಷ ವಿಶೇಷವಾಗಿ ದೇವಸ್ಥಾನ ಸಮಿತಿ ವತಿಯಿಂದ ಅನ್ನಸಂತರ್ಪಣಾ ಕಾರ್ಯ ತಲಕಾವೇರಿಯಲ್ಲಿ ಎರಡು ಕಡೆಗಳಲ್ಲಿ ನಡೆಯಲಿದೆ ಎಂದು ಅವರು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಶಿವಪ್ಪ ಮಾತನಾಡಿ, ಪವಿತ್ರ ತೀರ್ಥೋದ್ಭವ ಜಾತ್ರೆಗೆ ಎ್ಲ್ಲಲ ಇಲಾಖಾ ಅಧಿಕಾರಿಗಳು ಸಹಕಾರ ನೀಡುವಂತೆ ಅವರು ಕೋರಿದರು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಉಷಾದೇವಮ್ಮ ಮಾತನಾಡಿ, ತೀರ್ಥೋದ್ಭವದ ದಿನ ಯಾವುದೇ ಅವ್ಯವಸ್ಥೆಯಾಗದಂತೆ ಪೊಲೀಸ್ ಇಲಾಖೆ ಕ್ರಮ ವಹಿಸಬೇಕು ಎಂದರು.
ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ, ಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ದೊಡ್ಡ ಸಿದ್ದಯ್ಯ, ಜಿಲ್ಲಾ ಪಂಚಾಯಿತಿ ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವಕುಮಾರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಮಲ್ಲು ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಡಿ.ಬಿ.ಧರ್ಮಪ್ಪ, ಬಿ.ಬಿ.ಭಾರತೀಶ್, ಬೀನಾ ಬೊಳ್ಳಮ್ಮ, ಶರೀನ್ ಸುಬ್ಬಯ್ಯ, ಬಬ್ಬೀರ ಸರಸ್ವತಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಬಿ.ಅಂಜನಪ್ಪ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಯಳದಾಳು ಪದ್ಮಾವತಿ, ಕೊಡಗು ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಎಂ.ಬಿ.ದೇವಯ್ಯ, ಅರ್ಚಕರಾದ ನಾರಾಯಣಾಚಾರ್, ತಹಶೀಲ್ದಾರ್ ವಾಸುದೇವಾಚಾರ್ಯ, ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಕುಮಾರ್, ಸಂಪತ್ತು ಕುಮಾರ್, ಕೋಡಿ ಚಂದ್ರಶೇಖರ್ ಹಾಜರಿದ್ದರು.
ಇದೇ ಸಂದರ್ಭದಲ್ಲಿ ಕೇಶ ಮುಂಡನದ ಹೊಸ ಕಟ್ಟಡವನ್ನು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಬಿದ್ದಂಡ ಉಷಾ ದೇವಮ್ಮ, ಸೇವಾ ಕೌಂಟರ್ನ್ನು ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ರೀನಾ ಜಗನ್ನಾಥ್ ಮತ್ತು ಸಾಂಪ್ರದಾಯಿಕ ವಸ್ತ್ರ ದೊರೆಯುವ ಸ್ಥಳ ಮಳಿಗೆಯನ್ನು ಜಿಲ್ಲಾ ಪಂಚಾಯಿತಿ ಸದಸ್ಯ ಎಸ್.ಎನ್.ರಾಜಾರಾವ್ ಉದ್ಘಾಟಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.