ಬೆಂಗಳೂರು: ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ದೊರೆತಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿರುವ ಭಾರತೀಯ ಭಾಷಾ ಅಧ್ಯಯನ ಕೇಂದ್ರದಲ್ಲಿ `ಕನ್ನಡ ಮತ್ತು ತೆಲುಗು ಶಾಸ್ತ್ರೀಯ ಭಾಷಾ ಅಧ್ಯಯನ ಕೇಂದ್ರ~ ಆರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ `ಮುಖ್ಯಮಂತ್ರಿ~ ಚಂದ್ರು ಸೋಮವಾರ ಇಲ್ಲಿ ತಿಳಿಸಿದರು.
ಕೇಂದ್ರದ ಮಾನವ ಸಂಪನ್ಮೂಲ ಇಲಾಖೆ ಸೆಪ್ಟೆಂಬರ್ 29ರಂದು ಈ ಸಂಬಂಧ ಆದೇಶ ಹೊರಡಿಸಿದ್ದು, ಈ ತಿಂಗಳ ಅಂತ್ಯದಲ್ಲಿ ಕೇಂದ್ರದ ಉದ್ಘಾಟನೆ ನಡೆಯಲಿದೆ. ಇದಕ್ಕೆ ಬೇಕಾಗಿರುವ ಅನುದಾನವನ್ನು ಕೇಂದ್ರ ಸರ್ಕಾರವೇ ನೀಡಲಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಕೇಂದ್ರದ ನಿರ್ವಹಣೆಗೆ ಪ್ರಸಕ್ತ ವರ್ಷ ರೂ 54.54 ಲಕ್ಷ ಅನುದಾನ ದೊರೆಯಲಿದೆ. ಇದಲ್ಲದೆ 12ನೇ ಪಂಚವಾರ್ಷಿಕ ಯೋಜನೆ ಅವಧಿಯಲ್ಲಿ 10.28 ಕೋಟಿ ರೂಪಾಯಿ ಅನುದಾನ ದೊರೆಯಲಿದ್ದು, ಪ್ರತಿ ವರ್ಷ 2.18 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತದೆ ಎಂದರು.
ಸದ್ಯಕ್ಕೆ ಈ ಕೇಂದ್ರವು ಭಾರತೀಯ ಭಾಷಾ ಅಧ್ಯಯನ ಕೇಂದ್ರದಡಿ ಕಾರ್ಯನಿರ್ವಹಿಸಲಿದ್ದು, ಬರುವ ದಿನಗಳಲ್ಲಿ ಇದನ್ನು ಸ್ವಾಯತ್ತ ಸಂಸ್ಥೆಯನ್ನಾಗಿ ಮಾಡಬೇಕು ಎಂದು ಮನವಿ ಮಾಡಿದರು.
ಒಂದರಿಂದ ಐದನೇ ತರಗತಿವರೆಗೆ ಮಾತೃಭಾಷೆಯಲ್ಲಿಯೇ ಶಿಕ್ಷಣ ನೀಡುವ ವಿಷಯಕ್ಕೆ ಸಂಬಂಧಿಸಿದ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿದೆ. ಪ್ರಕರಣದ ತ್ವರಿತ ಇತ್ಯರ್ಥಕ್ಕೆ ಪೂರಕ ಪ್ರಯತ್ನಗಳನ್ನು ಸರ್ಕಾರ ಮಾಡಬೇಕು. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಸರ್ಕಾರ ಮತ್ತು ಖಾಸಗಿ ಶಾಲೆಗಳ ನಡುವಿನ ಅಂತರವನ್ನು ಕಡಿಮೆ ಮಾಡಬಹುದಾಗಿದೆ. ಸರ್ಕಾರಿ ಶಾಲೆಗಳು ಮುಚ್ಚುವುದನ್ನು ತಡೆಯಲು ಇದರಿಂದ ಅನುಕೂಲವಾಗಲಿದೆ ಎಂದು ಉತ್ತರಿಸಿದರು.