ನವದೆಹಲಿ (ಪಿಟಿಐ): ಭೂ ಸ್ವಾಧೀನ ಮಸೂದೆ ಬಗ್ಗೆ ಪರಿಶೀಲಿಸುತ್ತಿರುವ ಸಂಸದೀಯ ಸಮಿತಿಯು ತನ್ನ ವರದಿಯನ್ನು ತ್ವರಿತವಾಗಿ ಸಲ್ಲಿಸುವಂತೆ ಸಮಿತಿಯ ನೇತೃತ್ವ ವಹಿಸಿರುವ ಬಿಜೆಪಿಯ ಸುಮಿತ್ರಾ ಮಹಾಜನ್ ಅವರಿಗೆ ಸರ್ಕಾರ ಗುರುವಾರ ಮನವಿ ಮಾಡಿದೆ.
ಮುಂದಿನ ವರ್ಷ ನಡೆಯಲಿರುವ ಉತ್ತರಪ್ರದೇಶ ಚುನಾವಣೆಗೆ ಮೊದಲು ಭೂ ಸ್ವಾಧೀನ ಮಸೂದೆ ಅಂಗೀಕರಿಸಲು ಕೇಂದ್ರ ಸರ್ಕಾರ ಉತ್ಸುಕವಾಗಿದೆ.
ವರದಿಯನ್ನು ಶೀಘ್ರ ಸಲ್ಲಿಸುವಂತೆ ಮಹಾಜನ್ ಅವರಿಗೆ ಈಗಾಗಲೇ ಪತ್ರ ಬರೆದಿರುವ ಗ್ರಾಮೀಣಾಭಿವೃದ್ಧಿ ಸಚಿವ ಜೈರಾಮ್ ರಮೇಶ್, ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಮತ್ತು ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕ ಅರುಣ್ ಜೇಟ್ಲಿ ಅವರನ್ನೂ ಭೇಟಿ ಮಾಡಿ ಈ ದಿಸೆಯಲ್ಲಿ ಮುತುವರ್ಜಿ ವಹಿಸುವಂತೆ ಕೋರಿದ್ದಾರೆ.