ಬೆಂಗಳೂರು: ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಮಾಲೀಕತ್ವದ `ನಿರಾಣಿ ಶುಗರ್ಸ್~ ಕಾರ್ಖಾನೆ ವಿಸ್ತರಣಾ ಯೋಜನೆಗಾಗಿ ಸ್ವಾಧೀನಪಡಿಸಿಕೊಂಡಿದ್ದ 170 ಎಕರೆ ಭೂಮಿಯನ್ನು ಸರ್ಕಾರ ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿದೆ.
`ನಿರಾಣಿ ಶುಗರ್ಸ್~ ಕಾರ್ಖಾನೆಯು ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನಲ್ಲಿದ್ದು, ಈ ಕಾರ್ಖಾನೆಯ ಡಿಸ್ಟಿಲರಿ ಮತ್ತು ಸಹ ವಿದ್ಯುತ್ ಉತ್ಪಾದನಾ ಘಟಕದ ವಿಸ್ತರಣಾ ಯೋಜನೆಗೆ ಭೂಮಿ ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ರೈತರು 40 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ಸರ್ಕಾರ ರೈತರ ಒತ್ತಡಕ್ಕೆ ಮಣಿದು ಭೂ ಸ್ವಾಧೀನ ಪ್ರಕ್ರಿಯೆಯಿಂದ ಹಿಂದೆ ಸರಿಯಲು ನಿರ್ಧರಿಸಿದೆ.
ಈ ನಡುವೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಧರಣಿನಿರತ ರೈತರನ್ನು ಗುರುವಾರ ಭೇಟಿ ಮಾಡುವ ಕಾರ್ಯಕ್ರಮವಿದ್ದು, ಅದರ ಹಿಂದಿನ ದಿನವಾದ ಬುಧವಾರ ಸರ್ಕಾರ ಈ ನಿರ್ಧಾರ ಕೈಗೊಂಡಿರುವುದು ಕುತೂಹಲ ಕೆರಳಿಸಿದೆ