ಬೀದರ್: ಭ್ರಷ್ಟಾಚಾರವನ್ನು ತಡೆಗಟ್ಟುವ ನಿಟ್ಟಿನಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಭ್ರಷ್ಟಾಚಾರ ವಿರೋಧಿ ವೇದಿಕೆಯ ಅಧ್ಯಕ್ಷ ಟಿ.ಜೆ. ಅಬ್ರಹಾಂ ನುಡಿದರು. ನಗರದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ `ನಾನು ಭ್ರಷ್ಟಾಚಾರ ವಿರೋಧಿ~ ವಿಷಯ ಕುರಿತು ಮಾತನಾಡಿದರು.
ಭ್ರಷ್ಟಾಚಾರದ ವಿರುದ್ಧ ಧರಣಿ, ಹೋರಾಟಗಳಿಂದ ಪ್ರಯೋಜನವಿಲ್ಲ. ಇಲ್ಲ. ಇದನ್ನು ತೊಡೆಯಲು ವಕೀಲರು ಮತ್ತು ಮಾಧ್ಯಮ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಅಂಥವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಹೇಳಿದರು.
ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಮಹಾತ್ಮಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ವಕೀಲರೇ ಆಗಿದ್ದರು. ಹೀಗಾಗಿ ಭ್ರಷ್ಟಾಚಾರ ತಡೆಯುವಲ್ಲಿ ವಕೀಲರ ಪಾತ್ರ ಪ್ರಮುಖವಾಗಿದೆ. ವಕೀಲರು ಪ್ರಕರಣ ದಾಖಲಿಸಿದರೆ, ಪತ್ರಕರ್ತರು ಭ್ರಷ್ಟರನ್ನು ಬಯಲಿಗೆ ಎಳೆಯಬೇಕು ಎಂದು ಸಲಹೆ ಮಾಡಿದರು.
ಪ್ರತಿ ಜಿಲ್ಲೆಯಲ್ಲಿ 20 ವಕೀಲರು ಸೇರಿಕೊಂಡು ಭ್ರಷ್ಟಾಚಾರದ ವಿರುದ್ಧ ಅಭಿಯಾನ ನಡೆಸಿದ್ದಲ್ಲಿ ಭ್ರಷ್ಟಾಚಾರ ನಿಯಂತ್ರಿಸಬಹುದು ಎಂದು ಅಭಿಪ್ರಾಯಪಟ್ಟರು. ಜನ ಪ್ರಾಮಾಣಿಕ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿದ್ದಲ್ಲಿ ಭ್ರಷ್ಟಾಚಾರ ತನ್ನಿಂದ ತಾನೇ ಕಡಿಮೆ ಆಗುತ್ತದೆ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಮಚಂದ್ರರಾವ್ ಗಂದಗೆ ಹೇಳಿದರು. ಮಾಜಿ ಶಾಸಕ ಸೈಯದ್ ಜುಲ್ಫೇಕಾರ್ ಹಾಷ್ಮಿ, ವಕೀಲರ ಸಂಘದ ಜಿಲ್ಲಾ ಉಪಾಧ್ಯಕ್ಷ ಬಾಬುರಾವ್ ಹೊನ್ನಾ, ಭ್ರಷ್ಟಾಚಾರ ವಿರೋಧಿ ಆಂದೋಲನದ ಅಧ್ಯಕ್ಷ ಈಶ್ವರಪ್ಪ ಚಾಕೋತೆ ಉಪಸ್ಥಿತರಿದ್ದರು.