ಬೆಂಗಳೂರು: ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಯೋಜನೆ (ಎನ್ಆರ್ಎಚ್ಎಂ) ಹಗರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಉತ್ತರ ಪ್ರದೇಶದ ಮಾಜಿ ಸಚಿವ ಬಾಬು ಸಿಂಗ್ ಕುಶ್ವಾ ಅವರು ಬಿಜೆಪಿಗೆ ಸೇರ್ಪಡೆಯಾಗಿರುವ ಕುರಿತು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಲೇವಡಿ ಮಾಡಿದರು.
ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, `ಕುಶ್ವಾ ಅವರು ಮಾಯಾವತಿ ಸಂಪುಟದಲ್ಲಿ ಸಚಿವರಾಗಿದ್ದಾಗ ಎನ್ಆರ್ಎಚ್ಎಂ ಹಗರಣದಲ್ಲಿ ಭಾಗಿಯಾಗಿದ್ದರು ಎಂಬ ಆರೋಪ ಇದೆ. ಅಂಥವರನ್ನು ಬಿಜೆಪಿ ತನ್ನ ತೆಕ್ಕೆಗೆ ಸೆಳೆದುಕೊಂಡಿದೆ~ ಎಂದು ಟೀಕಿಸಿದರು.