ಚನ್ನಗಿರಿ: ಮಂಗಳಮುಖಿಯರಿಗೂ ಸರ್ಕಾರದ ಸೌಲಭ್ಯ ದೊರಕುವಂತಾಗಬೇಕು. ಈ ನಿಟ್ಟಿನಲ್ಲಿ ಅವರನ್ನು ಗುರುತಿಸುವ ಕಾರ್ಯ ಮೊದಲು ಆಗಬೇಕು. ಅವರನ್ನು ಕೂಡಾ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂದು ಸರ್ಕಾರಿ ಅಭಿಯೋಜಕಿ ಸಿ.ಕೆ.ಸರೋಜಾ ಹೇಳಿದರು.
ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಆರೋಗ್ಯ ಇಲಾಖೆ ಹಾಗೂ ಶಿಶು ಕಲ್ಯಾಣ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಶುಕ್ರವಾರ ನಡೆದ ಲೈಂಗಿಕ ಅಲ್ಪಸಂಖ್ಯಾತ ವ್ಯಕ್ತಿಗಳ ಹಕ್ಕುಗಳ ಕುರಿತ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
₨ 25 ಸಾವಿರಕ್ಕಿಂತ ಕಡಿಮೆ ವರಮಾನ ಹೊಂದಿದವರು ಉಚಿತ ಕಾನೂನು ನೆರವು ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ. ಜನತಾ ನ್ಯಾಯಾಲಯ ಹಾಗೂ ಲೋಕ ಅದಾಲತ್ ಮೂಲಕ ರಾಜಿ ಮಾಡಿಕೊಳ್ಳಲು ಉಚಿತ ಕಾನೂನು ನೆರವು ಸಿಗುತ್ತದೆ ಎಂದರು. ತಾಲ್ಲೂಕು ವೈದ್ಯಾಧಿಕಾರಿ ಡಾ. ಮಂಜುನಾಥ್, ಶಿಶು ಅಭಿವೃದ್ಧಿ ಅಧಿಕಾರಿ ರಾಮಲಿಂಗಪ್ಪ, ವಕೀಲ ಎನ್.ಆರ್.ಪಟೇಲ್, ಶಿರಸ್ತೇದಾರ್ ಶಂಕರಮೂರ್ತಿ ಉಪಸ್ಥಿತರಿದ್ದರು. ವಕೀಲರ ಸಂಘದ ಅಧ್ಯಕ್ಷ ವೈ.ಎಂ.ರಾಮಚಂದ್ರರಾವ್ ಅಧ್ಯಕ್ಷತೆ ವಹಿಸಿದ್ದರು.