ರಾಯಚೂರು: ಎರಡು ದಿನಗಳಿಂದ ಸುರಿದ ಮಳೆಗೆ ರಾಯಚೂರು- ಮಂತ್ರಾಲಯಕ್ಕೆ ಸಂಪರ್ಕ ಕಲ್ಪಿಸಲು ತುಂಗಭದ್ರಾ ನದಿಗೆ ನಿರ್ಮಿಸಿದ ತಾತ್ಕಾಲಿಕ ಸೇತುವೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ.
ಸೇತುವೆ ಕೊಚ್ಚಿಹೋದ ಹಿನ್ನೆಲೆಯಲ್ಲಿ ದ್ವಿಚಕ್ರವಾಹನ ಹಾಗೂ ಲಘು ವಾಹನಗಳ ಸಂಚಾರವೂ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ರಾಜ್ಯ ಸರ್ಕಾರವು ಮಂತ್ರಾಲಯಕ್ಕೆ ತೆರಳುವ ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸುಮಾರು 1.67 ಕೋಟಿ ವೆಚ್ಚದಲ್ಲಿ ತುಂಗಭದ್ರಾ ನದಿಗೆ ತಾತ್ಕಾಲಿಕ ಸೇತುವೆಯನ್ನು ನಿರ್ಮಾಣ ಮಾಡಿತ್ತು.
ಒಂದೆರಡು ತಿಂಗಳ ಹಿಂದೆ ಸ್ವಲ್ಪ ಪ್ರಮಾಣದಲ್ಲಿ ಮಳೆಯಾದ ಸಂದರ್ಭದಲ್ಲಿ ತುಂಗಭದ್ರಾ ನದಿಗೆ ನಿರ್ಮಿಸಲಾದ ತಾತ್ಕಾಲಿಕ ಸೇತುವೆ ಕುಸಿದು ಸುಮಾರು ಒಂದು ವಾರ ಸಂಚಾರ ಸ್ಥಗಿತಗೊಂಡಿತ್ತು.
ಆದರೆ, ಜಿಲ್ಲಾಡಳಿತ ತಾತ್ಕಾಲಿಕ ಸೇತುವೆಯನ್ನು ದುರಸ್ತಿಗೊಳಿಸಿ ಮಂತ್ರಾಲಯಕ್ಕೆ ತೆರಳುವ ಭಕ್ತರಿಗೆ ಅನುಕೂಲ ಮಾಡಿಕೊಟ್ಟಿತ್ತು.
ಈಗ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿರುವುದರಿಂದ ಮಂತ್ರಾಲಯಕ್ಕೆ ತೆರಳುವ ಭಕ್ತರು ರೈಲು ಮಾರ್ಗವಾಗಿ ಹೋಗುವುದು ಅನಿವಾರ್ಯವಾಗಿದೆ. ಸೇತುವೆ ಕೊಚ್ಚಿಹೋದ ಹಿನ್ನೆಲೆಯಲ್ಲಿ ಈಶಾನ್ಯ ಸಾರಿಗೆ ಸಂಸ್ಥೆಗೂ ಸಾಕಷ್ಟು ನಷ್ಟ ಸಂಭವಿಸುತ್ತಿದೆ.