ನಾಪೋಕ್ಲು: ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗಿದೆ ಎಂದು ಜಿ.ಪಂ ಸದಸ್ಯೆ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ ಹೇಳಿದರು.
ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮಂಗಳವಾರ ಆಯೋಜಿಸಲಾಗಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತಾಲೂಕು ಮಟ್ಟದ ಕ್ರೀಡಾ ಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಗುವಿನ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿ ಸರ್ಕಾರಿ ಶಾಲೆಗಳಲ್ಲಿ ಜಾರಿಗೆ ತಂದಿರುವ ಚಿಣ್ಣರ ಅಂಗಳದಂತಹ ಕಾರ್ಯಕ್ರಮದಲ್ಲಿ ಆಟದೊಡನೆ ಪಾಠ ಕ್ರಮವನ್ನು ಅನುಸರಿಸಲಾಗುತ್ತಿದೆ. ಕ್ರೀಡೆಗಳಿಂದ ಆರೋಗ್ಯವೃದ್ಧಿ ಸಾಧಿಸಲು ಸಾಧ್ಯ. ವಿದ್ಯಾರ್ಥಿಗಳು ಸಣ್ಣ ವಯಸ್ಸಿನಿಂದಲೇ ಉತ್ತಮ ತರಬೇತಿ ಮೂಲಕ ಅಭ್ಯಸ ಮಾಡಿದರೆ ಮಾತ್ರ ಕ್ರೀಡೆಗಳಲ್ಲಿ ಸಾಧನೆ ಮಾಡಲು ಸಾಧ್ಯ. ಕ್ರೀಡೆಯಿಂದ ದೈಹಿಕ, ಮಾನಸಿಕ ಸ್ಥಿತಿ ಉತ್ತಮಗೊಳ್ಳುತ್ತದೆ ಎಂದರು.
ಪಥಸಂಚಲನದ ಗೌರವ ಸ್ವೀಕರಿಸಿ ಮಾತನಾಡಿದ ತಾ.ಪಂ. ಸದಸ್ಯ ಬೊಳ್ಳಚೆಟ್ಟೀರ ಸುರೇಶ್, ದೈಹಿಕ ಶಿಕ್ಷಕರು ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಉತ್ತಮ ತರಬೇತಿ ಹಾಗೂ ಮಾರ್ಗದರ್ಶನ ನೀಡುವುದರಿಂದ ಉತ್ತಮ ಕ್ರೀಡಾ ಪಟುಗಳಾಗಲು ಸಾಧ್ಯ ಎಂದರು.
ಗ್ರಾ.ಪಂ. ಸದಸ್ಯ ಅರುಣ್ ಬೇಬ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ದೈಹಿಕ ಶಿಕ್ಷಕ ಕೆ.ಬಿ. ಕಾಳಪ್ಪ ಕ್ರೀಡಾ ಕೂಟಕ್ಕೆ ಚಾಲನೆ ನೀಡಿದರು. ನಾಪೋಕ್ಲು ಶಿವಾಜಿ ಸ್ಪೋಟ್ಸ್ ಕ್ಲಬ್ ಅಧ್ಯಕ್ಷ ಕಾಟುಮಣಿಯಂಡ ಉಮೇಶ್ ತಂಡಗಳ ಪರಿಚಯ ಮಾಡಿಕೊಂಡರು.
ವೇದಿಕೆಯಲ್ಲಿ ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಕಾಂಡಂಡ ಪ್ರತೀಜಾ ಅಚ್ಚಪ್ಪ, ಎಸ್ಡಿಎಂಸಿ ಅಧ್ಯಕ್ಷ ಕೆ.ಎಂ. ರಮೇಶ್, ತಾಲ್ಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ದೊಡ್ಡಣ್ಣ, ಚಪ್ಪೆಂಡಡಿ ಶಾಲಾ ಮುಖ್ಯ ಶಿಕ್ಷಕ ಎನ್.ಕೆ. ಪ್ರಭು ಅಂಕುರ್, ಶಾಲೆಯ ಮುಖ್ಯ ಶಿಕ್ಷಕಿ ಕೇಟೋಳೀರ ರತ್ನಾ ಚರ್ಮಣ, ಪ್ರಮುಖರಾದ ಎನ್.ಎಸ್. ಉದಯಶಂಕರ್, ಕುಂಡ್ಯೋಳಂಡ ರಮೇಶ್ ಮುದ್ದಯ್ಯ, ಶಿವಚಾಳಿಯಂಡ ಅಂಬಿ ಕಾರ್ಯಪ್ಪ ಉಪಸ್ಥಿತರಿದ್ದರು. ದೈಹಿಕ ಶಿಕ್ಷಕ ಕೋಟೇರ ಸುರೇಶ್ ಸ್ವಾಗತಿಸಿದರು. ಶಿಕ್ಷಕಿ ಉಷಾರಾಣಿ ನಿರೂಪಿಸಿದರು. ಮುಖ್ಯಶಿಕ್ಷಕಿ ಜಾನಿರಾಣಿ ವಂದಿಸಿದರು.