ನಾಗಮಂಗಲ: ದೇಶದಲ್ಲಿ ಮಕ್ಕಳಿಗೆ ನೀಡಿರುವ ಹಕ್ಕುಗಳು ಸ್ಪಷ್ಟವಾಗಿ ಉಲ್ಲಂಘನೆಯಾಗುತ್ತಿದ್ದು, ಪೋಷಕರು ಆತಂಕ ಪಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಜಿಲ್ಲಾ ಬಾಲವಿಕಾಸ ಅಕಾಡೆಮಿ ಸದಸ್ಯ ಗದ್ದೆಭೂವನಹಳ್ಳಿ ದೇವರಾಜು ಹೇಳಿದರು.
ತಾಲ್ಲೂಕಿನ ದೇವಲಾಪುರ ಹೋಬಳಿ ಭೀಮನಹಳ್ಳಿಯಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಸೋಮವಾರ ಆಯೋಜಿಸಿದ್ದ ಮಕ್ಕಳ ಗ್ರಾಮಸಭೆಯಲ್ಲಿ ಮಾತನಾಡಿದರು.
ಇತ್ತೀಚೆಗೆ ಉತ್ತರಪ್ರದೇಶದಲ್ಲಿ ಹೆಣ್ಣು ಮಗಳೊಬ್ಬಳ ಮೇಲೆ ಪೋಷಕರಿಂದಲೇ ನಡೆದ ಲೈಂಗಿಕ ದೌರ್ಜನ್ಯ, ಹೋಂ ವರ್ಕ್ ಮಾಡದೆ ಶಿಕ್ಷಕರು ಶಿಕ್ಷಿಸುವರು ಎಂದು ಹೆದರಿ ಸೀಮೆ ಎಣ್ಣೆ ಸುರಿದುಕೊಂಡು ವಿಜಾಪುರದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಗಳು ಆತಂಕಕಾರಿ ಬೆಳವಣಿಗೆಗಳು. ಖಾಸಗಿ ಶಾಲೆಯಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಖಾಸಗಿ ಶಾಲೆಗಳು ಫಲಿತಾಂಶವನ್ನೇ ಮಾನದಂಡವನ್ನಾಗಿಟ್ಟುಕೊಂಡು ಮಕ್ಕಳ ಮೇಲೆ ಒತ್ತಡ ಹೇರದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ಶಿಕ್ಷಣ ಸಂಯೋಜಕ ಶ್ರೀನಿವಾಸಾಚಾರ್ ಮಾತನಾಡಿ, ಮಕ್ಕಳ ಹಕ್ಕುಗಳು ಕೇವಲ ಬಿಸಿಯೂಟಕ್ಕೆ ಮಾತ್ರ ಸೀಮಿತವಾಗಬಾರದು. ಪೋಷಕರಿಗೆ ಮಾರ್ಗದರ್ಶನ ಮಾಡುವ ನಿಟ್ಟಿನಲ್ಲಿ ಯೋಚಿಸಿ, ಅವರಿಂದಲೇ ಸಮಾಜದ ರಕ್ಷಣೆ ಆಗಬೇಕು. ವಿವೇಕಾನಂದ, ರಾಮಕೃಷ್ಣ ಪರಮಹಂಸರ ತತ್ವಗಳನ್ನು ಪಾಲಿಸಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ನುಡಿದರು.
ದೇವಲಾಪುರ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಿನಯ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಪಿಡಿಒ ಶಿವಲಿಂಗಯ್ಯ, ಗ್ರಾಮ ಪಂಚಾಯಿತಿ ಸದಸ್ಯರಾದ ಜಯಮ್ಮ, ಗೌರಮ್ಮ, ಹುಚ್ಚಮಾಯಿಗೌಡ, ಮಹೇಶ, ಎಸ್ಡಿಎಂಸಿ ಅಧ್ಯಕ್ಷ ಶಂಕರಪ್ಪ ಇದ್ದರು. ಸುರೇಶ್ ಸ್ವಾಗತಿಸಿ, ಕರಿಗೌಡ ನಿರೂಪಿಸಿದರು.