ಬೆಂಗಳೂರು: ಮಹಿಳೆಯೊಬ್ಬರು ಏಳು ವರ್ಷದ ಮಗುವಿಗೆ ವಿಷಾಹಾರ ನೀಡಿ ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲೂರು ಸಮೀಪದ ಸಾತನೂರು ಕಾಲೊನಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಅಲ್ಲಿನ ನಿವಾಸಿ ಸುಬ್ಬಲಕ್ಷ್ಮಿ (30) ತಮ್ಮ ಮಗಳು ಮಧುಶ್ರೀಗೆ ವಿಷ ಬೆರೆಸಿದ ಆಹಾರ ತಿನ್ನಿಸಿ ಬಳಿಕ ತಾವೂ ತಿಂದು ಮನೆಯಲ್ಲೇ ಮೃತಪಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಪತಿ ಮಂಜುನಾಥ್ ಅವರಿಂದ ದೂರವಾಗಿ ಮೂರ್ನಾಲ್ಕು ವರ್ಷಗಳಿಂದ ಆನೇಕಲ್ನಲ್ಲಿ ನೆಲೆಸಿದ್ದಾರೆ. ಸುಬ್ಬಲಕ್ಷ್ಮಿ ಮಗಳ ಜತೆ ತವರು ಮನೆಯ ಸಮೀಪವೇ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಅವರು ಮನೆಯ ಮುಂಭಾಗದಲ್ಲೇ ದಿನಸಿ ಅಂಗಡಿ ಇಟ್ಟುಕೊಂಡಿದ್ದರು. ಮಧುಶ್ರೀ, ವಿಜಯ ಭಾರತಿ ಶಾಲೆಯಲ್ಲಿ ಒಂದನೇ ತರಗತಿ ಓದುತ್ತಿದ್ದಳು ಎಂದು ಪೊಲೀಸರು ಹೇಳಿದ್ದಾರೆ.
`ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಮತ್ತೆಂದು ಹಿಂದಿರುಗಿ ಬಾರದ ಲೋಕಕ್ಕೆ ಹೋಗುತ್ತಿದ್ದೇನೆ. ನನ್ನ ಸಾವಿಗೆ ಯಾರು ಕಾರಣರಲ್ಲ~ ಎಂದು ಸುಬ್ಬಲಕ್ಷ್ಮಿ ಪತ್ರ ಬರೆದಿಟ್ಟಿದ್ದಾರೆ. ಘಟನೆ ಸಂಬಂಧ ಕೊಲೆ ಮತ್ತು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರತ್ಯೇಕಪ್ರಕರಣ: ಇಬ್ಬರ ಆತ್ಮಹತ್ಯೆ
ನಗರದ ಮೈಕೊಲೇಔಟ್ ಮತ್ತು ಎಲೆಕ್ಟ್ರಾನಿಕ್ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ಮಹಿಳೆ ಸೇರಿದಂತೆ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಿದ್ಧ ಉಡುಪು ಕಾರ್ಖಾನೆ ನೌಕರರೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಕೊಲೇಔಟ್ ಸಮೀಪದ ದೇವರಚಿಕ್ಕನಹಳ್ಳಿಯಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಸುರೇಶ್ (31) ಆತ್ಮಹತ್ಯೆ ಮಾಡಿಕೊಂಡವರು. ಸವಿತಾ ಎಂಬುವರನ್ನು ವಿವಾಹವಾಗಿದ್ದ ಅವರಿಗೆ ಖವನ್ ಎಂಬ ಐದು ವರ್ಷದ ಮಗನಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಸಿದ್ಧ ಉಡುಪು ಕಾರ್ಖಾನೆಯಲ್ಲಿ ಉದ್ಯೋಗಿಯಾಗಿರುವ ಸವಿತಾ ಅವರು ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಸುರೇಶ್ ಮನೆಯಲ್ಲೇ ನೇಣು ಹಾಕಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮೈಕೊಲೇಔಟ್ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಮತ್ತೊಂದು ಪ್ರಕರಣ: ಬೇಗೂರು ಸಮೀಪದ ಚಾಮುಂಡೇಶ್ವರಿಲೇಔಟ್ ಎರಡನೇ ಅಡ್ಡರಸ್ತೆ ನಿವಾಸಿ ರಾಮಚಂದ್ರನಾಯ್ಡು ಎಂಬುವರ ಪತ್ನಿ ಶಶಿಕಲಾ (19) ಅವರು ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರ ಮದುವೆಯಾಗಿ ಒಂದು ವರ್ಷವಾಗಿತ್ತು. ಪತಿಯ ಜತೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅವರು ಸಿದ್ಧ ಉಡುಪು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ (ಜ.4) ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದ ಶಶಿಕಲಾ ಮನೆಗೆ ವಾಪಸ್ ಬಂದಿರಲಿಲ್ಲ. ಮನೆಗೆ ಹೋಗುವುದಾಗಿ ಕಾರ್ಖಾನೆಯಲ್ಲಿ ಹೇಳಿ ಬಂದಿದ್ದ ಅವರು ಮನೆಯ ಸಮೀಪದ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಾವಿಯಲ್ಲಿ ಮಹಿಳೆಯೊಬ್ಬರ ಶವ ತೇಲುತ್ತಿರುವುದನ್ನು ನೋಡಿದ ಸ್ಥಳೀಯರು ಆ ಬಗ್ಗೆ ಠಾಣೆಗೆ ಶನಿವಾರ ಬೆಳಿಗ್ಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಯಿತು ಎಂದು ಪೊಲೀಸರು ಹೇಳಿದ್ದಾರೆ.`ಅಳಿಯ ಮತ್ತು ಮಗಳು ಅನ್ಯೋನ್ಯವಾಗಿದ್ದರು~ ಎಂದು ಶಶಿಕಲಾ ಪೋಷಕರು ಹೇಳಿಕೆ ಕೊಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಎಲೆಕ್ರಾನಿಕ್ಸಿಟಿ ಪೊಲೀಸ್ಠಾನೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.