ಮಡಿಕೇರಿ: ಭಾರತ ಸರ್ಕಾರ 18 ವರ್ಷ ಮೀರಿದ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ನೀಡಿದ್ದು ಅದು ಸದ್ಬಳಕೆಯಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಕೃಷ್ಣಪ್ಪ ಹೇಳಿದರು.
ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದ ಬಳಿಯ ಮೈದಾನದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ವಿವಿಧ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ವಾಲಿಬಾಲ್ ಮತ್ತು ರಂಗೋಲಿ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ಮತದಾನದ ಹಕ್ಕು ದೇಶದಲ್ಲಿ ಒಂದು ಮೂಲಭೂತ ಹಕ್ಕಾಗಿದೆ. 18 ವರ್ಷ ತುಂಬಿದ ಎಲ್ಲಾ ಪ್ರಜೆಗಳಿಗೂ ಮತದಾನದ ಹಕ್ಕಿದ್ದು, ಇವರೆಲ್ಲರೂ ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಬೇಕಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗ ಮತದಾರರಿಗೆ ಅರಿವು ಮೂಡಿಸುವ ಸಾಕಷ್ಟು ಕೆಲಸ ಮಾಡುತ್ತಿದೆ. ಆದರೆ ನಗರ ಪ್ರದೇಶದಲ್ಲಿ ಹಲವು ಜನರು ಮತದಾನದಿಂದ ಹೊರಗುಳಿಯುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಚಂದ್ರೆಗೌಡ ಮಾತನಾಡಿ, 2012ನೇ ಸಾಲಿನಲ್ಲಿ ಜನಗಣತಿ ಅಂಕಿ ಅಂಶಗಳನ್ನು ಪರಿಶೀಲಿಸಿದಾಗ 18 ರಿಂದ 19 ವರ್ಷ ತುಂಬಿದ ಯುವಕ ಯುವತಿಯರಲ್ಲಿ ಕೇವಲ ಶೇ. 40ರಷ್ಟು ಜನರು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ 2012ನೇ ಸಾಲಿನ ವಿಶೇಷ ಪರಿಷ್ಕರಣೆಯಲ್ಲಿ ಸಾಕಷ್ಟು ಪ್ರಗತಿ ಸಾಧಿಸಲು ಜಿಲ್ಲೆಯಲ್ಲಿ ಕ್ರಮ ವಹಿಸಲಾಗಿದೆ ಎಂದರು.
ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಬಾಬು ರವೀಂದ್ರನಾಥ್ಪಟೇಲ್, ಜಿಲ್ಲಾ ಯುವ ಜನ ಸೇವಾ ಇಲಾಖೆ ಸಹಾಯಕ ನಿರ್ದೇಶಕ ಜಿ. ಗಾಯತ್ರಿ, ಜಿಲ್ಲಾಧಿಕಾರಿ ಕಚೇರಿ ಚುನಾವಣಾ ಶಿರಸ್ತೆದಾರ, ಪಿ.ಸಿ. ಪ್ರವೀಣ ಕುಮಾರ್, ತಾಲ್ಲೂಕು ಕಚೇರಿ ಶಿರಸ್ತೆದಾರ್, ಕೆ.ಕೆ.ಕೃಷ್ಣಮೂರ್ತಿ ಮತ್ತು ವಿವಿಧ ಇಲಾಖಾ ಅಧಿಕಾರಿ ಸಿಬ್ಬಂದಿ ಕಾರ್ಯಕ್ರಮದಲ್ಲಿ ಹಾಜರಿದ್ದರು.