ದಾವಣಗೆರೆ: ರಾಜ್ಯದ ರೈತರಲ್ಲಿ ರಾಜಕೀಯ ಪ್ರಜ್ಞೆ ಮೂಡಿಸಿ, ರಾಜಕೀಯ ನೆಲೆ ಕಲ್ಪಿಸುವ ಉದ್ದೇಶದಿಂದ ರೈತ ಸಂಘ ಚುನಾವಣಾ ಕಣಕ್ಕೆ ಇಳಿಯಲು ನಿರ್ಧರಿಸಿದೆ ಎಂದು ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಪುಟ್ಟಣ್ಣಯ್ಯ ಭಾನುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ರಾಜಕೀಯಕ್ಕೆ ಮರು ಪ್ರವೇಶ ಪಡೆಯುವ ಕುರಿತು ಚರ್ಚೆ ನಡೆಸಲಾಗುತ್ತಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕನಿಷ್ಠ 10 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ನಿರ್ಧರಿಸಲಾಗಿದೆ. ಸಂಘದ ಎಲ್ಲ ಪ್ರಮುಖ ರಾಜಕೀಯ ನಿರ್ಣಯ ಹಾಗೂ ನಿರ್ಧಾರಗಳನ್ನು ಮಾರ್ಚ್ ಅಂತ್ಯದ ವೇಳೆಗೆ ದಾವಣಗೆರೆಯಲ್ಲಿ ನಡೆಯುವ ರೈತರ ಬೃಹತ್ ಸಮಾವೇಶದಲ್ಲಿ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದರು.