ತಿರುವನಂತಪುರ (ಪಿಟಿಐ): ಬೆಂಗಳೂರಿನಲ್ಲಿ 2008ರಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿಸಲಾಗಿರುವ ಪಿಡಿಪಿ ನಾಯಕ ಅಬ್ದುಲ್ ನಾಸೀರ್ ಮದನಿ ಆರೋಗ್ಯ ಸ್ಥಿತಿ ಕುರಿತು ಕರ್ನಾಟಕ ಸರ್ಕಾರ ಸಲ್ಲಿಸಿರುವ ವರದಿ ಪರಿಶೀಲನೆಗಾಗಿ ಕೇರಳ ಸರ್ಕಾರ ಐವರು ತಜ್ಞ ವೈದ್ಯರ ಸಮಿತಿಯನ್ನು ರಚಿಸಿದೆ.
ಮದನಿಗೆ ಸೂಕ್ತ ವೈದ್ಯಕೀಯ ನೆರವು ನೀಡಲು ಕೇರಳ ಸರ್ಕಾರ ಮುಂದಾಗುವುದೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಉಮ್ಮನ್ ಚಾಂಡಿ, ತಜ್ಞ ವೈದ್ಯರ ಸಮಿತಿ ವರದಿ ನೀಡಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದರು. ಕೇರಳ ಸರ್ಕಾರದ ಕೋರಿಕೆಯ ಮೇರೆಗೆ ಕರ್ನಾಟಕ ಇತ್ತೀಚೆಗೆ ಮದನಿ ಆರೋಗ್ಯ ಸ್ಥಿತಿ ಬಗ್ಗೆ ಸಮಗ್ರ ವರದಿಯನ್ನು ಸಲ್ಲಿಸಿತ್ತು.
ಮದನಿ ಆರೋಗ್ಯ ಸ್ಥಿತಿ ಪರಿಶಿಲನೆ ಮತ್ತು ವೈದ್ಯಕೀಯ ನೆರವು ನೀಡುವ ನಿಟ್ಟಿನಲ್ಲಿ ಸರ್ವಪಕ್ಷಗಳ ಸದಸ್ಯರನ್ನು ಒಳಗೊಂಡ ನಿಯೋಗವನ್ನು ಕರ್ನಾಟಕಕ್ಕೆ ಕಳಿಸುವ ಯಾವುದೇ ಯೋಚನೆ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಇತ್ತೀಚೆಗೆ ನಡೆದ ಕೇರಳ ವಿಧಾನಮಂಡಲ ಅಧಿವೇಶನದಲ್ಲಿ ಮದನಿ ಆರೋಗ್ಯ ವಿಷಯ ಪ್ರತಿಧ್ವನಿಸಿತ್ತು. ಮದನಿ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾನೆ. ಕರ್ನಾಟಕ ಹೈಕೊರ್ಟ್ ಇತ್ತೀಚೆಗೆ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.