ಬೆಂಗಳೂರು: ರಾಜಾಜಿನಗರ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರುವ ಕೆಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ರಾಜಾಜಿನಗರ, ಬಸವೇಶ್ವರನಗರ, ಕಾಮಾಕ್ಷಿಪಾಳ್ಯದ ವಿವಿಧ ಭಾಗಗಳಲ್ಲಿ ಪ್ರಚಾರ ನಡೆಸಿದರು.
ಮನೆ ಮನೆಗೆ ತೆರಳಿ ಕರಪತ್ರಗಳನ್ನು ಹಂಚಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.
`ಕ್ಷೇತ್ರದ ಬಡತನ ರೇಖೆಗಿಂತ ಕೆಳಗಿರುವ ಹಾಗೂ ಪಡಿತರ ಚೀಟಿಯಿಂದ ವಂಚಿತರಾಗಿರುವ ಜನರಿಗೆ ಪಡಿತರ ಚೀಟಿ ಕೊಡಿಸಲಾಗುವುದು. ನಿರುದ್ಯೋಗಿ ಯುವ ಜನರಿಗೆ ಉದ್ಯೋಗ ಕೊಡಿಸಲಾಗುವುದು' ಎಂದು ಅವರು ಭರವಸೆ ನೀಡಿದರು.
`ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಆರಂಭಿಸಲಾಗಿತ್ತು. ಕೆಜೆಪಿ ಪಕ್ಷ ಅಧಿಕಾರಕ್ಕೆ ಬಂದರೆ ಆ ಯೋಜನೆಗಳನ್ನು ಸಮರ್ಪಕವಾಗಿ ಕಾರ್ಯಗತಗೊಳಿಸಲಾಗುವುದು' ಎಂದು ಅವರು ತಿಳಿಸಿದರು.